ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಡಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಗ್ಲೆಗುಡ್ಡೆಯಲ್ಲಿ ಎಸ್ಐಟಿ ನಡೆಸಿದ ಶೋಧ ಕಾರ್ಯದಲ್ಲಿ ಪತ್ತೆಯಾಗಿದ್ದ ಅಸ್ಥಿಪಂಜರಗಳ ಪೈಕಿ ಮೂವರ ಗುರುತು ಡಿಎನ್ಎ ಪರೀಕ್ಷೆ ಮೂಲಕ ದೃಢಪಟ್ಟಿದೆ.

ಎಸ್ಐಟಿ ಅಧಿಕಾರಿಗಳು ಜು. 15ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಅಂತಿಮ ವರದಿಯಲ್ಲಿ ಡಿಎನ್ಎ ಪರೀಕ್ಷೆ ಮೂಲಕ ಮೂವರ ಗುರುತು ದೃಢಪಟ್ಟಿರುವ ವಿಚಾರ ಉಲ್ಲೇಖಿಸಿದ್ದಾರೆ.
ಡಿಎನ್ಎ ಪರೀಕ್ಷೆಯಲ್ಲಿ ಗುರುತಿಸಲಾದವರು ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಟಿ. ಶೆಟ್ಟಿಗೇರಿ ಗ್ರಾಮದ ಯು. ಬಿ. ಅಯ್ಯಪ್ಪ (70), ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ದಾಸರಕಲ್ಲಹಳ್ಳಿ ನಿವಾಸಿ ಆದಿಶೇಷ ನಾರಾಯಣ (27) ಹಾಗೂ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಮೀಸಗಾಣಹಳ್ಳಿಯ ಕೃಷ್ಣಪ್ಪ (85) ಎಂದು ವರದಿಯಲ್ಲಿ ತಿಳಿಸಲಾಗಿದೆ. ಈ ಮೂವರು ನಾಪತ್ತೆಯಾಗಿದ್ದು, ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಇಬ್ಬರ ನಾಪತ್ತೆ ಕುರಿತು ದೂರು ದಾಖಲಾಗಿದೆ. ಡಿಎನ್ಎ ಪರೀಕ್ಷೆಯಿಂದ ಗುರುತು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಸಂಬಂಧಿತ ಕುಟುಂಬಗಳು ಎಸ್ಐಟಿಗೆ ಮನವಿ ಸಲ್ಲಿಸಿದಲ್ಲಿ ಅಸ್ಥಿಪಂಜರಗಳನ್ನು ಕಾನೂನು ಪ್ರಕ್ರಿಯೆಯಂತೆ ಹಸ್ತಾಂತರಿಸಲು ಅವಕಾಶವಿದೆ.




