ಹಾಳಾದ ಬೆಂಗಳೂರು ರೋಡ್: 500 ಕಿ.ಮೀ ವೈಟ್‌ ಟಾಪಿಂಗ್, ನಗರದ ರಸ್ತೆಗಳ ಉದ್ದ ಅಗಲ ಬಿಚ್ಚಿಟ್ಟ ಡಿಕೆಶಿ

Share with

ಬೆಂಗಳೂರು, ಅಕ್ಟೋಬರ್ 21: ರಾಜಧಾನಿ ಬೆಂಗಳೂರಿನಲ್ಲಿ (Bengaluru) ರಸ್ತೆ ಗುಂಡಿಗಳ ವಿಚಾರ ಭಾರಿ ಸದ್ದು ಮಾಡುತ್ತಿರುವ ನಡುವೆ 4 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ 500 ಕಿ.ಮೀ. ರಸ್ತೆಗೆ ವೈಟ್ ಟಾಪಿಂಗ್ಗೆ DPR ಸಿದ್ಧತೆ ನಡೆದಿದೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದು, ನಗರದಲ್ಲಿ 1,650 ಕಿ.ಮೀ. ಉದ್ದದ ಪ್ರಮುಖ ರಸ್ತೆಗಳಿವೆ. ಆ ಪೈಕಿ ಹೊಸದಾಗಿ 104 ಕಿ.ಮೀ.ರಸ್ತೆಗೆ ವೈಟ್ ಟಾಪಿಂಗ್ ನಡೆಸಲಾಗುತ್ತೆ. ವೈಟ್ ಟಾಪಿಂಗ್ ರಸ್ತೆಗಳು ಸುಮಾರು 25-30 ವರ್ಷಗಳ ಕಾಲ ಬಾಳಿಕೆ ಬರುತ್ತವೆ ಎಂದು ತಿಳಿಸಿದ್ದಾರೆ.

ಈಗಾಗಲೇ 148 ಕಿ.ಮೀ ಉದ್ದದ ರಸ್ತೆ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಒಟ್ಟು 83 ರಸ್ತೆಗಳ ಅಭಿವೃದ್ದಿಗೆ 1,800 ಕೋಟಿ ಹಣ ವ್ಯಯಿಸಲಾಗುತ್ತಿದೆ. 350 ಕಿಲೋ ಮೀಟರ್ ಉದ್ದದ 182 ರಸ್ತೆಗಳಲ್ಲಿ ಬ್ಲಾಕ್ ಟಾಪಿಂಗ್ ಕಾಮಗಾರಿ ನಡೆಯುತ್ತಿದೆ. ಇದಕ್ಕೆ 695 ಕೋಟಿ ರೂಪಾಯಿ ವ್ಯಯಿಸಲಾಗುತ್ತಿದೆ. ಸಿಎಂ ಹೊಸದಾಗಿ 1100 ಕೋಟಿ ರೂಪಾಯಿ ಅನುದಾನ ನೀಡಿದ್ದು, ಇದರಿಂದ 550 ಕಿ.ಮೀ. ಉದ್ದದ ರಸ್ತೆಗಳ ಡಾಂಬರೀಕರಣ ಕೈಗೆತ್ತಿಕೊಂಡಿದ್ದೇವೆ. ಕಳೆದ ಸಚಿವ ಸಂಪುಟ ಸಭೆಯಲ್ಲಿ 117 ಕಿ.ಮೀ. ಉದ್ದದ ಬೆಂಗಳೂರು ಬಿಜಿನೆಸ್ ಕಾರಿಡಾರ್ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ. ಬಿಡಿಎ ಕಾಯ್ದೆ ಪ್ರಕಾರ ದುಪ್ಪಟ್ಟು ಪರಿಹಾರ ನೀಡಲು ಅವಕಾಶವಿಲ್ಲ. ಆದರೂ ನಮ್ಮ ಸರ್ಕಾರ ರೈತರಿಗೆ ಬಂಪರ್ ಪರಿಹಾರ ನೀಡಲು ಮುಂದಾಗಿದೆ. ಮರು ಪಟ್ಟು ಪರಿಹಾರ, ಟಿಡಿಆರ್ ಅಥವಾ ಎಫ್ ಎಆರ್ ‌ನೀಡಲು ತೀರ್ಮಾನ ಮಾಡಿದ್ದೇವೆ. ಹಿಂದಿನ ಯಾವ ಸರ್ಕಾರವೂ ಈ ವಿಚಾರದಲ್ಲಿ ಧೈರ್ಯ ತೋರಿಸಿರಲಿಲ್ಲ ಎಂದು ಡಿಸಿಎಂ ಹೇಳಿದ್ದಾರೆ.

ನಗರದ ಅಭಿವೃದ್ದಿಗೆ 1.5 ಲಕ್ಷ ಕೋಟಿ ರೂ. ಮೊತ್ತದ ಯೋಜನೆಗಳಿಗೆ ಅನುದಾನ ನೀಡಬೇಕು. ಮುಂಬೈ ನಂತರ ಬೆಂಗಳೂರು ಅತಿ ಹೆಚ್ಚು ತೆರಿಗೆ ನೀಡುತ್ತಿದೆ‌ ಎಂದು ಪ್ರಧಾನಿಗಳಿಗೆ ಮನವಿ ಮಾಡಿದ್ದೆ. ಆದರೆ ಅವರಿಂದ ಇದುವರೆಗೂ ಉತ್ತರ ಬಂದಿಲ್ಲ. ನಗರದಲ್ಲಿ 113 ಕಿಲೋಮೀಟರ್ ಉದ್ದದ ಎಲಿವೇಟೆಡ್ ಕಾರಿಡಾರ್ ನಿರ್ಮಾಣಕ್ಕೆ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಮೊದಲ ಹಂತದಲ್ಲಿ 40 ಕಿಲೋಮೀಟರ್ ಉದ್ದದ ಟನಲ್ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಇದಕ್ಕೆ ಖಾಲಿಡಬ್ಬ ಸಂಸದನೊಬ್ಬ ಬರೀ ಟ್ವೀಟ್ ಮಾಡಿಕೊಂಡು ಟೀಕೆ ಮಾಡುತ್ತಿದ್ದಾನೆ. ನಿರ್ಮಲಾ ಸೀತಾರಾಮನ್ ಕೇಂದ್ರ ಹಣಕಾಸು ಸಚಿವರಾಗಿದ್ದಾರೆ‌. ಹೀಗಿದ್ದೂ ಒಬ್ಬನೇ ಒಬ್ಬ ಸಂಸದ ಹತ್ತು ರೂಪಾಯಿ ಅನುದಾನವನ್ನು ಕರ್ನಾಟಕಕ್ಕೆ ತಂದಿದ್ದರೆ ಜನರು ನೀಡುವ ಶಿಕ್ಷೆಗೆ ನಾನು ತಲೆಬಾಗುತ್ತೇನೆ ಎಂದಿದ್ದಾರೆ.

ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಜೆ- ನರ್ಮ್ ಯೋಜನೆಯಡಿ ಎಲ್ಲದಕ್ಕೂ ಅನುದಾನ ಬರುತ್ತಿತ್ತು. ಆದರೆ ಈಗಿನ ಸಂಸದರು ಒಂದು ಯೋಜನೆಗೂ ಅರ್ಜಿ ಕೊಟ್ಟಿಲ್ಲ. ಒಬ್ಬರಾದರೂ ಪ್ರಧಾನಿ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದಾರೆಯೇ? ಬಿಜೆಪಿ ಸಂಸದರ ಕೊಡುಗೆ ರಾಜ್ಯಕ್ಕೆ ಶೂನ್ಯ ಎಂನದು ಡಿಕೆಶಿ ಆರೋಪಿಸಿದ್ದಾರೆ. ನಗರದಾದ್ಯಂತ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ರಸ್ತೆ ಗುಂಡಿಗಳನ್ನು ಮುಚ್ಚಿದ್ದೇವೆ. ಹಿಂದಿನ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ನಗರದಾದ್ಯಂತ 20 ಸಾವಿರ ಗುಂಡಿಗಳಿವೆ ಎಂದು ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದ್ದರು ಎಂದೂ ಡಿಕೆಶಿ ಹೇಳಿದ್ದಾರೆ.


Share with

Leave a Reply

Your email address will not be published. Required fields are marked *