ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ಎ.14ರಂದು ಮಂಗಳೂರಿಗೆ ಆಗಮಿಸುತ್ತಿದ್ದು, ಗೋಲ್ಡ್ ಫಿಂಚ್ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಕಾರ್ಯಕ್ರಮಕ್ಕೆ ಬೇಕಾದ ಸಿದ್ಧತೆಗಳು ನಡೆಯುತ್ತಿದ್ದು, ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮುಖಂಡ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಉಡುಪಿ ಬಿಜೆಪಿ ಮಾಧ್ಯಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಬಾರಿ 400 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಿಸಲು ಜನರು ನಿಶ್ಚಯ ಮಾಡಿದ್ದು, ಚುನಾವಣೆಗೂ ಮುನ್ನವೇ ಫಲಿತಾಂಶ ನಿಗದಿಯಾಗಿದೆ ಎಂದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಸಿದ್ದರಾಮಯ್ಯ ಕಳೆದ ಹತ್ತು ವರ್ಷಗಳಿಂದಲೂ ಮೋದಿ ಅಲೆ ಇಲ್ಲ ಎಂದು ಹೇಳುತ್ತಲೇ ಇದ್ದಾರೆ. ಆದರೆ ಮೋದಿ ಅಲೆ ವೃದ್ಧಿಸುತ್ತಲೇ ಇದೆ. ಕಾಂಗ್ರೆಸ್ ನಲ್ಲಿ ಸರಿಯಾದ ಅಭ್ಯರ್ಥಿಗಳೆ ಇಲ್ಲ. ಇದೇ ಕಾರಣಕ್ಕೆ ಹುಬ್ಬಳ್ಳಿಯಲ್ಲಿ ದಿಂಗಾಲೇಶ್ವರ ಸ್ವಾಮೀಜಿಯನ್ನು ನಿಲ್ಲಿಸುವ ಮೂಲಕ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ ಎಂದು ಟೀಕಿಸಿದರು.