ಉಡುಪಿಯಲ್ಲಿ ಧರ್ಮಸ್ಥಳ ಶಾಂತಿವನ ಟ್ರಸ್ಟ್ ನ ಕಾರ್ಯದರ್ಶಿ ಬಿ. ಎಸ್. ಸೀತಾರಾಮ ತೋಳ್ತಾಡಿತ್ತಾಯ ಮಾಹಿತಿ
ಉಡುಪಿ: ಹತ್ತನೇ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಪುತ್ತಿಗೆ ಮಠ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ‘ಸೌಖ್ಯವನ’ ಪರೀಕ ಇವರ ಸಹಯೋಗದೊಂದಿಗೆ ‘ಯೋಗೇಶ್ವರ ಕೃಷ್ಣನೆಡೆಗೆ ಯೋಗ ನಡಿಗೆ’ ಎಂಬ ವಿಶೇಷ ಕಾರ್ಯಕ್ರಮವನ್ನು ಇದೇ ಜೂನ್ 21ರಂದು ಉಡುಪಿಯಲ್ಲಿ ಆಯೋಜಿಸಲಾಗಿದೆ ಎಂದು ಧರ್ಮಸ್ಥಳ ಶಾಂತಿವನ ಟ್ರಸ್ಟ್ ನ ಕಾರ್ಯದರ್ಶಿ ಬಿ. ಎಸ್. ಸೀತಾರಾಮ ತೋಳ್ತಾಡಿತ್ತಾಯ ಹೇಳಿದರು.
ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 6.30ಕ್ಕೆ ಉಡುಪಿ ಕ್ಲಾಕ್ ಟವರ್ ನಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಯೋಗ ನಡಿಗೆಗೆ ಚಾಲನೆ ನೀಡಲಿದ್ದಾರೆ. ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ ಅರುಣ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು. ಪರೀಕ ಸೌಖ್ಯವನದ ವ್ಯವಸ್ಥಾಪಕ ಪ್ರವೀಣ್ ಕುಮಾರ್ ಮಾತನಾಡಿ, ಈ ಯೋಗ ನಡಿಗೆಯಲ್ಲಿ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ‘ಸೌಖ್ಯವನ’ ಪರೀಕ ಇದರ ವೈದ್ಯಾಧಿಕಾರಿಗಳು, ಸಿಬ್ಬಂದಿ ಸಹಿತ ಸುಮಾರು 300 ಮಂದಿ ಯೋಗ ಪಟುಗಳು ಭಾಗವಹಿಸಲಿದ್ದಾರೆ. ಬಳಿಕ ಯೋಗ ನಡಿಗೆಯೂ ಅಲಂಕಾರ್, ಡಯಾನ್ ಸರ್ಕಲ್ ಮೂಲಕ ರಥಬೀದಿಗೆ ತಲುಪಲಿದೆ. ಬೆಳಿಗ್ಗೆ 7 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಸ್ವಾಮೀಜಿ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಆದರ್ಶ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಜಿ ಎಸ್ ಚಂದ್ರಶೇಖರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸೌಖ್ಯವನದ ಮುಖ್ಯ ವೈದ್ಯಾಧಿಕಾರಿ ಡಾ. ಗೋಪಾಲ್ ಪೂಜಾರಿ, ವೈದ್ಯಾಧಿಕಾರಿಗಳಾದ ಡಾ. ಶೋಭಿತ್ ಶೆಟ್ಟಿ, ಡಾ. ಪೂಜಾ ಜಿ. ಇದ್ದರು.