ಮಂಗಳೂರು: ಡಿಜೆ ಮ್ಯೂಸಿಕ್ ನಿಷೇಧ, ಪ್ರಸಾದದ ಸುರಕ್ಷತೆ ಸೇರಿದಂತೆ ನವರಾತ್ರಿ ಮತ್ತು ಶಾರದಾ ಮಹೋತ್ಸವ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಕಟಿಸಿದ್ದಾರೆ.
ಡಿಜೆ ಮ್ಯೂಸಿಕ್ನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳ ಬಳಿ ಲೌಡ್ ಸ್ಪೀಕರ್ಗಳನ್ನು ಕೂಡ ಬಳಕೆ ಮಾಡಬಾರದು. ಮೆರವಣಿಗೆ ಸೇರಿದಂತೆ ಮಹೋತ್ಸವದ ಸಂದರ್ಭದಲ್ಲಿ ವಿತರಿಸುವ ಪ್ರಸಾದದ ಸುರಕ್ಷತೆಯನ್ನು ಖಾತರಿಪಡಿಸಿಕೊಳ್ಳುವುದು ಆಯೋಜಕರ ಜವಾಬ್ದಾರಿಯಾಗಿರುತ್ತದೆ ಎಂದರು.
ವೇಷಧಾರಿಗಳು ಸ್ಥಳೀಯ ಪೊಲೀಸ್ ಠಾಣೆಗಳಿಂದ ಅನುಮತಿ ಪಡೆದುಕೊಳ್ಳಬೇಕು. ವೇಷಭೂಷಣಗಳು ಯಾವುದೇ ಧರ್ಮ ಅಥವಾ ಸಮುದಾಯದ ಭಾವನೆಗಳನ್ನು ನೋಯಿಸುವಂತಿರಬಾರದು. ವಿಧಾನಪರಿಷತ್ ಚುನಾವಣಾ ನೀತಿ ಸಂಹಿತೆ ಇರುವ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳ ಏಕಗವಾಕ್ಷಿಯ ಮೂಲಕ ಅಗತ್ಯ ಅನುಮತಿಗಳನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಶಾರದೆಯ ಮೂರ್ತಿ ಪ್ರತಿಷ್ಠಾಪನೆಯ ಮೊದಲು ಸಂಘಟಕರು ಮೆಸ್ಕಾಂ, ಅಗ್ನಿಶಾಮಕ ಇಲಾಖೆ ಹಾಗೂ ಸ್ಥಳೀಯಾಡಳಿತ ಸಂಸ್ಥೆಗಳಿಂದ ಅನುಮತಿ ಪಡೆದುಕೊಳ್ಳಬೇಕು. ಪೊಲೀಸ್ ಇಲಾಖೆ ಅನುಮತಿ ನೀಡಿರುವ ಮಾರ್ಗಗಳಲ್ಲಿ ಮಾತ್ರ ಮೆರವಣಿಗೆ ನಡೆಸಬೇಕು ಎಂಬಿತ್ಯಾದಿ ಮಾರ್ಗಸೂಚಿಗಳನ್ನು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ಪ್ರಕಟಿಸಿದ್ದಾರೆ.