ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಕೊಡಗು, ಕರಾವಳಿ, ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಗುಡ್ಡ ಕುಸಿತ, ಮರ ಬೀಳುವಿಕೆ, ಮನೆ ಕುಸಿತ ಇಂತಹ ಅನಾಹುತಗಳು ಹೆಚ್ಚಾಗಿವೆ. ಕೊಡಗಿನ ತ್ರಿವೇಣಿ ಸಂಗಮ, ಶೃಂಗೇರಿಯ ಕಪ್ಪೆಶಂಕರ ದೇಗುಲ ಮತ್ತು ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯ ಜಲಾವೃತಗೊಂಡಿವೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರಕ್ಕೆ ತೊಡಕು ಉಂಟಾಗಿದೆ.

ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ, ಡ್ರೆಸ್ಸಿಂಗ್ ರೂಂ, ಮತ್ತು ಲಗೇಜ್ ಕೊಠಡಿ ಜಲಾವೃತಗೊಂಡಿವೆ. ಕುಮಾರಧಾರ ಬಳಿಯ ದರ್ಪಣ ತೀರ್ಥ ಹೊಳೆ ಸೇತುವೆ ಮುಳುಗಡೆಯಾಗಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ತುಂಗಾ, ಭದ್ರಾ, ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ. ಶೃಂಗೇರಿಯ ಶ್ರೀಮಠದ ತುಂಗಾನದಿ ದಡದ ಕಪ್ಪೆಶಂಕರ ದೇಗುಲ ಸಂಪೂರ್ಣ ಜಲಾವೃತವಾಗಿದೆ. ಸಂಧ್ಯಾವಂದನ ಮಂಟಪಕ್ಕೂ ನೀರು ನುಗ್ಗಿದೆ. ಶೃಂಗೇರಿ-ವಿದ್ಯಾರಣ್ಯಪುರ ರಸ್ತೆ ಸಂಪರ್ಕ ಕಡಿತಗೊಂಡಿದೆ. ರಾಷ್ಟ್ರೀಯ ಹೆದ್ದಾರಿ 169ರ ಶೃಂಗೇರಿ, ಆನೆಗುಂದ, ತನಿಕೋಡು ಬಳಿ ಗುಡ್ಡ ಕುಸಿತದಿಂದ ಎಸ್ಟೇಟ್ಗಳಲ್ಲಿನ ಮನೆಗಳು ಕುಸಿಯುವ ಅಪಾಯದಲ್ಲಿವೆ. ತಳಿಹಳ್ಳ ಬಳಿ ಮರ ಬಿದ್ದು ವಿದ್ಯುತ್ ಕಂಬ ತುಂಡಾಗಿದ್ದು, ಬೈಕ್ ಸವಾರರು ಅಪಾಯದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರು-ಮುತ್ತೋಡಿ ಮಾರ್ಗ ಬಂದ್ ಆಗಿದೆ.




