ಒಂದೆಡೆ ಹೆರಿಗೆ ನೋವು ಕಾಣಿಸಿಕೊಂಡ ಮಹಿಳೆಯರನ್ನು ಹೆರಿಗೆ ಮಾಡಿಸಲು ಕರೆದೊಯ್ಯಬೇಕಾದ ತರಾತುರಿಯಲ್ಲಿರುವ ವೈದ್ಯಕೀಯ ಸಿಬ್ಬಂದಿ. ಮತ್ತೊಂದೆಡೆ, ಈಗ ಬೇಡ ಚಂದ್ರಗ್ರಹಣ (Lunar Eclipse) ಮುಗಿಯಲಿ ಎಂದು ಬೇಡಿಕೊಳ್ಳುತ್ತಿರುವ ಮಹಿಳೆಯರು. ನೋವು ಕಾಣಿಸಿಕೊಂಡ ಕೂಡಲೇ ಹೆರಿಗೆ ಮಾಡಿಸದಿದ್ದರೆ ತಾಯಿ-ಮಗುವಿನ ಜೀವಕ್ಕೆ ಅಪಾಯ ಎಂದು ಮಹಿಳೆಯರ ಮನವೊಲಿಸಲು ಸಾಹಸಪಡುತ್ತಿರುವ ವೈದ್ಯರು! ಇಂಥದ್ದೊಂದು ವಿಚಿತ್ರ ಹಾಗೂ ಅಪರೂಪದ ವಿದ್ಯಮಾನಕ್ಕೆ ಬಳ್ಳಾರಿ ಜಿಲ್ಲಾ (Ballari) ಸರ್ಕಾರಿ ಆಸ್ಪತ್ರೆ ಸಾಕ್ಷಿಯಾಗಿರುವ ಬಗ್ಗೆ ವರದಿಯಾಗಿದೆ.

ಚಂದ್ರಗ್ರಹಣದ ಸಮಯದಲ್ಲಿ, ಅನೇಕ ಗರ್ಭಿಣಿಯರು ಹೆರಿಗೆಗೆ ನಿರಾಕರಿಸಿದ್ದಾರೆ. ತೀವ್ರವಾದ ಹೆರಿಗೆ ನೋವು ಅನುಭವಿಸುತ್ತಿದ್ದರೂ, ಮಹಿಳೆಯರು ಶಸ್ತ್ರಚಿಕಿತ್ಸಾ ಕೋಣೆಗೆ ಪ್ರವೇಶಿಸಲು ನಿರಾಕರಿಸಿದ್ದಾರೆ. ಅಲ್ಲದೆ, ಮರುದಿನ ಗ್ರಹಣ ಮುಗಿಯುವವರೆಗೆ ತಮ್ಮ ಹೆರಿಗೆಯನ್ನು ಮುಂದೂಡಬೇಕೆಂದು ಒತ್ತಾಯಿಸಿದ್ದಾರೆ ಎಂಬುದಾಗಿ ಆಸ್ಪತ್ರೆಯ ಮೂಲಗಳನ್ನು ಉಲ್ಲೇಖಿಸಿ ‘ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್’ ವರದಿ ಮಾಡಿದೆ.
ವೈದ್ಯಕೀಯ ಸಲಹೆಗಳನ್ನು ನೀಡಿದರೂ ಗರ್ಭಿಣಿಯರು ಹೆರಿಗೆಗೆ ಒಪ್ಪಲೇ ಇಲ್ಲ. ಚಂದ್ರಗ್ರಹಣದ ಸಮಯದಲ್ಲಿ ಹೆರಿಗೆಯಾಗುವುದರಿಂದ ನವಜಾತ ಶಿಶು ಮತ್ತು ತಾಯಿ ಇಬ್ಬರಿಗೂ ಅಪಾಯ ಎದುರಾಗಬಹುದು ಎಂಬ ನಂಬಿಕೆಯನ್ನು ಪ್ರತಿಪಾದಿಸಿದ್ದಾರೆ. ನಂತರ ಇಬ್ಬರು ಗರ್ಭಿಣಿಯರಲ್ಲಿ ಆಮ್ಲಜನಕದ ಮಟ್ಟ ಕಡಿಮೆಯಾಗಲು ಶುರುವಾಗಿ ಪರಿಸ್ಥಿತಿ ಉಲ್ಬಣಗೊಂಡಿತು. ಇದರಿಂದಾಗಿ ಆಸ್ಪತ್ರೆ ಅಧಿಕಾರಿಗಳು ತುರ್ತು ಕ್ರಮಗಳನ್ನು ತೆಗೆದುಕೊಳ್ಳಬೇಕಾಯಿತು. ಹಿರಿಯ ವೈದ್ಯರು ವಾರ್ಡ್ಗೆ ಧಾವಿಸಿ ಮಹಿಳೆಯರು ಮತ್ತು ಅವರ ಕುಟುಂಬಗಳಿಗೆ ತಕ್ಷಣದ ಆರೋಗ್ಯ ಅಪಾಯಗಳ ಬಗ್ಗೆ ಮನವೊಲಿಸುವಲ್ಲಿ ಯಶಸ್ವಿಯಾದರು ಎಂದು ವರದಿ ತಿಳಿಸಿದೆ.




