ಹೆದ್ದಾರಿಯಲ್ಲಿನ ಗುಂಡಿ ಕಾರಣ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಸಮೇತ ರಸ್ತೆಗೆ ಬಿದ್ದ ಮಹಿಳೆ; ಲಾರಿಯಡಿಗೆ ಬಿದ್ದು ಮೃತ್ಯು

Share with

ಮಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುಂಡಿ ಕಾರಣ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಸಹಿತ ರಸ್ತೆಗೆ ಉರುಳಿಬಿದ್ದ ಮಹಿಳೆಯೊಬ್ಬರು ಲಾರಿಯಡಿಗೆ ಸಿಲುಕಿ ಮೃತಪಟ್ಟ ದಾರುಣ ಘಟನೆ ಆ.9ರಂದು ಬೆಳಗ್ಗೆ ನಗರ ಹೊರವಲಯದ ಕೂಳೂರು ರಾಯಲ್ ಓಕ್ ಬಳಿ ನಡೆದಿದೆ.

ಮೃತರನ್ನು ಎ.ಜೆ. ಆಸ್ಪತ್ರೆಯ ಸಿಬ್ಬಂದಿ ಮಾಧವಿ ಎಂದು ಗುರುತಿಸಲಾಗಿದೆ.

ಇವರು ತನ್ನ ದ್ವಿಚಕ್ರ ವಾಹನದಲ್ಲಿ ಕೂಳೂರು ಕಡೆಯಿಂದ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ಉದ್ಯೋಗ ನಿಮಿತ್ತ ತೆರಳುತ್ತಿದ್ದ ವೇಳೆ ಈ ಅಫಘಾತ ಸಂಭವಿಸಿದೆ.

ರಸ್ತೆಯಲ್ಲಿರುವ ಗುಂಡಿ ಕಾರಣ ಮಾಧವಿ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿಬಿದ್ದಿದೆ ಎನ್ನಲಾಗಿದೆ. ಇದೇ ವೇಳೆ ಹಿಂದಿನಿಂದ ಬರುತ್ತಿದ್ದ ಮೀನು ಸಾಗಾಟದ ಲಾರಿ ಅವರ ಮೇಲೆ ಹರಿದ ಪರಿಣಾಮ ಚಕ್ರದಡಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದು ಬಂದಿದೆ.

ಮೃತದೇಹವನ್ನು ನಗರದ ಎ.ಜೆ. ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.


Share with

Leave a Reply

Your email address will not be published. Required fields are marked *