ಕಾಸರಗೋಡು-ಪುತ್ತೂರು ರಸ್ತೆಯಲ್ಲಿ ಸಂಚರಿಸುತ್ತಿದ್ದ ಕೇರಳ ರಾಜ್ಯ ಸಾರಿಗೆ ಬಸ್ಸು ಉಕ್ಕುಡ ಸಮೀಪ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಮುಂಭಾಗ ಜಖಂಗೊಂಡಿದ್ದು, ಹಲವು ಪ್ರಯಾಣಿಕರಿಗೆ ಗಾಯಗಳಾಗಿರುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

ಸ್ಥಳೀಯರ ಪ್ರಕಾರ, ಬಸ್ ಚಾಲಕನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯತನದ ಚಾಲನೆಯಿಂದ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬಸ್ಸಿನಲ್ಲಿದ್ದ ಪ್ರಯಾಣಿಕರು ತೀವ್ರ ಆಘಾತಕ್ಕೊಳಗಾಗಿದ್ದು, ಕೆಲವರಿಗೆ ಗಾಯಗಳಾಗಿರಬಹುದು ಎಂದು ಪ್ರಾಥಮಿಕ ವರದಿಗಳು ತಿಳಿಸಿದ್ದು ಆದಾಗ್ಯೂ, ಈ ಬಗೆಗಿನ ಖಚಿತ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಅಪಘಾತಕ್ಕೀಡಾದ ಬಸ್ಸು ರಸ್ತೆಯ ಮಧ್ಯದಲ್ಲೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಪರ್ಯಾಯ ಸಾರಿಗೆ ಇಲ್ಲದೆ ಪರದಾಡುವಂತಾಯಿತು. ಹಿರಿಯ ನಾಗರಿಕರು ಮತ್ತು ಮಕ್ಕಳೊಂದಿಗೆ ಪ್ರಯಾಣಿಸುತ್ತಿದ್ದವರು ತಮ್ಮ ಮುಂದಿನ ಪ್ರಯಾಣಕ್ಕೆ ತೊಂದರೆ ಅನುಭವಿಸಿದರು.
ಅಪಾಯಕಾರಿ ಪರಿಸ್ಥಿತಿ
ಅಪಘಾತ ಸಂಭವಿಸಿದ ಪ್ರದೇಶ ಕಿರಿದಾಗಿದ್ದು, ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೆ ಕೆಟ್ಟು ನಿಂತ ಬಸ್ಸನ್ನು ರಸ್ತೆಯಲ್ಲೇ ಬಿಡಲಾಗಿದೆ. ಇದು ರಾತ್ರಿಯ ಸಮಯದಲ್ಲಿ ಇತರ ವಾಹನಗಳಿಗೆ ಅಪಾಯವನ್ನುಂಟುಮಾಡಬಹುದು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.




