ಕೇರಳದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ..!

Share with

ಕೊಚ್ಚಿ: ಕೇರಳದ ಆಲುವಾ ಸಮೀಪ ಅಪರಿಚಿತ ದುಷ್ಕರ್ಮಿಗಳು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ್ದು, ಘಟನೆಗೆ ಸಂಬಂಧಿಸಿದಂತೆ ರೈಲ್ವೆ ರಕ್ಷಣಾ ಪಡೆ (RPF) ತನಿಖೆ ಆರಂಭಿಸಿದೆ.

ಶನಿವಾರ ರಾತ್ರಿ ಸುಮಾರು 7.15ರ ಸುಮಾರಿಗೆ ಆಲುವಾ ಮತ್ತು ಅಂಗಮಾಲಿ ರೈಲ್ವೆ ನಿಲ್ದಾಣಗಳ ನಡುವೆ ಈ ಕೃತ್ಯ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಿರುವನಂತಪುರಂನಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ರೈಲನ್ನು ಗುರಿಯಾಗಿಸಿ ಕಲ್ಲು ಎಸೆಯಲಾಗಿದೆ. ಅದೃಷ್ಟವಶಾತ್, ಈ ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ. ಆದರೆ, ರೈಲಿನ ಹೊರಭಾಗಕ್ಕೆ ಸಣ್ಣಪುಟ್ಟ ಹಾನಿಯಾಗಿದೆ ಎಂದು ತಿಳಿದುಬಂದಿದೆ.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಆರ್‌ಪಿಎಫ್ ಅಧಿಕಾರಿಗಳು, ರೈಲಿನಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. “ದುಷ್ಕರ್ಮಿಗಳ ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಹಳಿ ಪಕ್ಕದ ನಿವಾಸಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದೆ,” ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರೈಲ್ವೆ ಪೊಲೀಸರು ಕೂಡ ಈ ಬಗ್ಗೆ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದ್ದಾರೆ.

ಮತ್ತೆ ಮರುಕಳಿಸಿದ ಕೃತ್ಯ

ಕಳೆದ ತಿಂಗಳಷ್ಟೇ ಕಣ್ಣೂರಿನಲ್ಲಿ ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ಈಗ ಮತ್ತೆ ಅಂತಹದ್ದೇ ಘಟನೆ ಮರುಕಳಿಸಿರುವುದು ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ. ರೈಲ್ವೆ ಆಸ್ತಿಪಾಸ್ತಿಗೆ ಹಾನಿ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರೈಲ್ವೆ ಇಲಾಖೆ ಎಚ್ಚರಿಸಿದೆ.


Share with

Leave a Reply

Your email address will not be published. Required fields are marked *