ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳ ಶಿಕ್ಷಕರು ಮತ್ತು ಶಿಕ್ಷಣ ಇಲಾಖೆಯ ಸಿಬ್ಬಂದಿ ಇನ್ಮುಂದೆ ಬಯೋಮೆಟ್ರಿಕ್ ವ್ಯವಸ್ಥೆಯ ಬದಲಾಗಿ ಕೃತಕ ಬುದ್ಧಿಮತ್ತೆ ಆಧಾರಿತ ‘ಕರ್ತವ್ಯ’ ಮೊಬೈಲ್ ಅಪ್ಲಿಕೇಶನ್ ಮೂಲಕ ಹಾಜರಾತಿ ದಾಖಲಿಸುವುದನ್ನು ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ರಾಜ್ಯ ಸರ್ಕಾರವು ಎಲ್ಲಾ ಇಲಾಖೆಗಳಲ್ಲಿ ಕರ್ನಾಟಕ ಅಡ್ವಾನ್ಸ್ ಅಟೆಂಡೆನ್ಸ್ ಮ್ಯಾನೇಜ್ಮೆಂಟ್ ಸಿಸ್ಟಮ್ (ಕಾಮ್ಸ್) ಜಾರಿಗೆ ತರುತ್ತಿದೆ. ಇದರ ಭಾಗವಾಗಿ ಶಾಲಾ ಶಿಕ್ಷಣ ಇಲಾಖೆಯ ಎಲ್ಲಾ ಕಾಯಂ ಶಿಕ್ಷಕರು, ಮುಖ್ಯ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿ ತಮ್ಮ ಮೊಬೈಲ್ನಲ್ಲಿ ‘ಕರ್ತವ್ಯ’ ಆ್ಯಪ್ ಡೌನ್ಲೋಡ್ ಮಾಡಿಕೊಂಡು ಹಾಜರಾತಿ ದಾಖಲಿಸಬೇಕು.
ಈ ಆ್ಯಪ್ ಮುಖ ಚಹರೆ ಮತ್ತು ಜಿಐಎಸ್ (ಭೌಗೋಳಿಕ) ತಂತ್ರಜ್ಞಾನವನ್ನು ಬಳಸಿಕೊಂಡು ಸಿಬ್ಬಂದಿಯ ಹಾಜರಾತಿಯನ್ನು ಖಚಿತಪಡಿಸಿಕೊಳ್ಳುತ್ತದೆ. ಪ್ರತಿ ದಿನ ಕೆಲಸದ ಸ್ಥಳದಲ್ಲಿ ಕಡ್ಡಾಯವಾಗಿ ಎರಡು ಬಾರಿ (ಬರುವಾಗ ಮತ್ತು ಹೋಗುವಾಗ) ಹಾಜರಾತಿ ದಾಖಲಿಸಬೇಕು. ಕೇವಲ ಶಾಲೆಗಳಲ್ಲದೆ, ಶಿಕ್ಷಕರು ತರಬೇತಿಗೆ ಹೋದಾಗ ಅಥವಾ ಎಸ್ ಎಸ್ ಎಲ್ ಸಿಯ ತರಗತಿಯ ಮೌಲ್ಯಮಾಪನ ಕೇಂದ್ರಗಳಲ್ಲಿದ್ದಾಗಲೂ ಇದೇ ಆ್ಯಪ್ ಬಳಸಬೇಕು ಎಂದು ಸೂಚಿಸಲಾಗಿದೆ.




