ಮೂರು ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಕ್ಷ ಮುನ್ನಡೆ

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಎಲ್ ಡಿಎಫ್ ಗೆ ಭಾರೀ ಮುಖಭಂಗವಾಗಿದ್ದು, ಸದ್ಯದ ಅಂಕಿ-ಅಂಶದ ಪ್ರಕಾರ ಯುಡಿಎಫ್ 85 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಬಹುಮತದ ಸಂಖ್ಯೆ ಪಡೆದಿದೆ.
ಎರಡು ಬಾರಿ ಅಧಿಕಾರದ ಗದ್ದುಗೆಯಲ್ಲಿದ್ದ ಪಿಣರಾಯಿ ವಿಜಯನ್ ನೇತೃತ್ವದ ಎಡಪಕ್ಷ ಈ ಬಾರಿಯ ಚುನಾವಣೆಯಲ್ಲಿ ಕೇವಲ 41 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಅಧಿಕಾರ ಕಳೆದುಕೊಳ್ಳುವಂತಾಗಿದೆ.
140 ಸದಸ್ಯ ಬಲದ ಕೇರಳ ವಿಧಾನಸಭೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು 71 ಸ್ಥಾನಗಳ ಬಹುಮತದ ಅಗತ್ಯವಿದೆ. 2021ರ ವಿಧಾನಸಭಾ ಚುನಾವಣೆಯಲ್ಲಿ ಎಲ್ ಡಿಎಫ್ ಬರೋಬ್ಬರಿ 92 ಸ್ಥಾನ ಪಡೆದು ಅಧಿಕಾರ ಹಿಡಿದಿತ್ತು. ಸತತ ಮೂರನೇ ಬಾರಿ ಅಧಿಕಾರದ ಗದ್ದುಗೆ ಏರುವ ಎಲ್ ಡಿಎಫ್ ಕನಸು ಈ ಬಾರಿ ಭಗ್ನಗೊಂಡಂತಾಗಿದೆ.
ಕೇರಳ ವಿಧಾನಸಭಾ ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಅಲ್ಪ ಮುನ್ನಡೆ ಸಾಧಿಸಿದೆ. ಕೇರಳದ ನೇಮಂ ಕ್ಷೇತ್ರದಲ್ಲಿ ಬಿಜೆಪಿಯ ರಾಜೀವ್ ಚಂದ್ರಶೇಖರ್ ಪ್ರತಿಸ್ಪರ್ಧಿ ಸಿಪಿಐ(ಎಂ)ನ ವಿ.ಶಿವನ್ ಕುಟ್ಟಿ ವಿರುದ್ಧ 1,302 ಮತಗಳ ಮುನ್ನಡೆ ಸಾಧಿಸಿದ್ದಾರೆ. ಕೋಝಿಕೋಡ್ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿಯ ಟಿ.ರಾನೀಶ್ ಅವರು ಐಯುಎಂಎಲ್ ನ ಫೈಝಲ್ ಬಾಬು ವಿರುದ್ಧ 341 ಮತಗಳ ಮುನ್ನಡೆ ಗಳಿಸಿದ್ದಾರೆ.
ಪಾಲಕ್ಕಾಡ್ ಕ್ಷೇತ್ರದಲ್ಲಿ ಬಿಜೆಪಿಯ ಶೋಭಾ ಸುರೇಂದ್ರನ್ ಅವರು ಕಾಂಗ್ರೆಸ್ ನ ರಮೇಶ್ ಪಿಶರೋಡೈ ವಿರುದ್ಧ 2,145 ಮತಗಳ ಮುನ್ನಡೆ ಸಾಧಿಸಿರುವುದಾಗಿ ವರದಿ ತಿಳಿಸಿದೆ.




