ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಜಯನಗರಂ ನಲ್ಲಿ ಎರಡು ರೈಲುಗಳ ನಡುವೆ ಅಪಘಾತ ಸಂಭವಿಸಿದ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆ ಆಗಿದೆ. ಗಾಯಾಳುಗಳ ಸಂಖ್ಯೆ 100ಕ್ಕೆ ಏರಿಕೆ ಆಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಸಿಎಂ ಜಗನ್ ಮೋಹನ್ ರೆಡ್ಡಿ ಅವರು ಪರಿಹಾರ ಘೋಷಿಸಿದ್ದಾರೆ.
ರವಿವಾರ ಸಂಜೆ 7 ಗಂಟೆ ವೇಳೆಗೆ ವಿಶಾಖಪಟ್ಟಣಂ-ಪಲಸಾ ವಿಶೇಷ ಪ್ಯಾಸೆಂಜರ್ ರೈಲು, ತಾಂತ್ರಿಕ ದೋಷದಿಂದಾಗಿ ಸಿಗ್ನಲ್ ಗೆ ಕಾಯುತ್ತಿದ್ದಾಗ ವಿಶಾಖಪಟ್ಟಣಂ-ರಾಯಗಢ ಪ್ಯಾಸೆಂಜರ್ ರೈಲು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಮೂರು ಬೋಗಿಗಳು ಹಳಿ ತಪ್ಪಿವೆ ಎನ್ನಲಾಗಿದೆ.
ಅಲರ್ಟ್ ಬಂದ ಕೂಡಲೇ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಸೌರಭ್ ಪ್ರಸಾದ್, ಇತರ ರೈಲ್ವೆ ಅಧಿಕಾರಿಗಳೊಂದಿಗೆ ತಕ್ಷಣ ಘಟನಾ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ವಿಶಾಖಪಟ್ಟಣಂ ಹಾಗೂ ವಿಜಯನಗರಂ ಜಿಲ್ಲೆಗಳ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಅಪಘಾತ ಹಿನ್ನೆಲೆ ಹಲವು ಮಾರ್ಗಗಳ ರೈಲು ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ವಿಜಯವಾಡ-ಜಾರ್ಸುಗೂಡ ರೈಲು ಖರಗ್ಪುರ, ಮಂಗಳೂರು ಸೆಂಟ್ರಲ್-ಸಂತ್ರಾಗಚ್ಚಿ ಎಕ್ಸ್ಪ್ರೆಸ್ ರೈಲು ಹಾಗೂ ಬೆಂಗಳೂರು-ಜಾಸಿದಿಹ್ ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.
ಸಿಕಂದ್ರಾಬಾದ್-ಹೌರಾ ಫಲಕ್ಸುಮಾ ಎಕ್ಸ್ಪ್ರೆಸ್, ಸಿಕಂದ್ರಾಬಾದ್-ಹೌರಾ, ಚೆನ್ನೈ ಸೆಂಟ್ರಲ್-ಹೌರಾ ಮೇಯಲ್, ವಾಸ್ಕೋಡಿಗಾಮಾ-ಷಾಲಿಮಾರ್ ಎಕ್ಸ್ಪ್ರೆಸ್ ಮಾರ್ಗವೂ ಬದಲಾವಣೆ ಮಾಡಲಾಗಿದ್ದು, ಹಲವು ಮಾರ್ಗಗಳ ಬದಲಾವಣೆಯಿಂದ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ರೈಲು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದು, ಗಾಯಗೊಂಡವರು ಶೀಘ್ರ ಗುಣಮುಖರಾಗಲಿ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಮಾತನಾಡಿದ್ದು ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಎಲ್ಲಾ ಪ್ರಯಾಣಿಕರನ್ನು ಸ್ಥಳಾಂತರಿಸಲಾಗಿದೆ ಮತ್ತು ರಾಜ್ಯ ಸರ್ಕಾರ ಮತ್ತು ರೈಲ್ವೆ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿರುವುದಾಗಿ ಪಿಎಂಒ ಇಂಡಿಯಾ ಎಕ್ಸ್ನಲ್ಲಿ ಟ್ವೀಟ್ ಮಾಡಿದೆ.