2024ನೇ ರಾಜ್ಯಕ್ಕೆ ಆಶಾದಾಯಕವಾಗಲಿದೆ: ಸಿಎಂ ಸಿದ್ದರಾಮಯ್ಯ

Share with

ಬೆಂಗಳೂರು: ಸರ್ಕಾರದ ಕಾರ್ಯದರ್ಶಿಗಳಿಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2024ನೇ ವರ್ಷಕ್ಕೆ ನಾವೆಲ್ಲರೂ ಕಾಲಿಡುತ್ತಿದ್ದು, ಈ ವರ್ಷ ರಾಜ್ಯಕ್ಕೆ ಆಶಾದಾಯಕವಾಗಲಿದೆ ಎಂದು ಹೇಳಿದರು.

ಸರ್ಕಾರದ ಕಾರ್ಯದರ್ಶಿಗಳಿಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಜ.1ರಂದು ಅವರನ್ನು ಭೇಟಿಯಾಗಿ ನೂತನ ವರ್ಷದ ಶುಭಾಶಯಗಳನ್ನು ಕೋರಿದ ಸಂದರ್ಭದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 35 ಸಾವಿರ ಕೋಟಿ ಬೆಳೆ ನಷ್ಟವಾಗಿದೆ.

ಪ್ರಕೃತಿ ಸಹಾಯವಿಲ್ಲದಿದ್ದರೆ, ಸರ್ಕಾರ ಏನು ಪರಿಹಾರ ಕೊಟ್ಟರು ಸಾಕಾಗುವುದಿಲ್ಲ. ಹವಾಮಾನ ಬದಲಾವಣೆಯಿಂದಾಗಿ ಈ ವೈಪರೀತ್ಯ ಕಾಣುತ್ತಿದ್ದೇವೆ. ಮುಂಗಾರಿನಲ್ಲಿ ಒಳ್ಳೆಯ ಮಳೆಯಾಗುವ ನಿರೀಕ್ಷೆ ಇದ್ದು 2024ರಲ್ಲಿ ಒಳ್ಳೆಯ ಮಳೆ ಬೆಳೆ ಆಗಲಿ ಎಂದು ಪ್ರಾರ್ಥನೆ ಮಾಡುವುದು ಎಂದು ತಿಳಿಸಿದರು.

“ಅಭಿವೃದ್ಧಿ ನಿರೀಕ್ಷಿತ ಫಲ ಕಾಣಲು ಸಮೃದ್ಧಿಯಾಗಿ ಮಳೆಯಾಗಲಿ. ಶೇ.60ಕ್ಕೂ ಹೆಚ್ಚು ಜನ ವ್ಯವಸಾಯದ ಮೇಲೆ ಅವಲಂಬಿತರಾಗಿದ್ದಾರೆ. ಗ್ಯಾರಂಟಿಗಳನ್ನು ಕೊಟ್ಟಿದ್ದರಿಂದ ಬರದ ತೀವ್ರತೆ ಕಡಿಮೆಯಾಗಿದೆ. ಬಡವರ ಕುಟುಂಬಕ್ಕೆ ಹಣ ದೊರೆಯುತ್ತಿದ್ದು, ಕೊಳ್ಳುವ ಶಕ್ತಿ ಇದೆ” ಎಂದು ಅವರು ಹೇಳಿದರು.

“ರಾಜ್ಯದ ಅಭಿವೃದ್ಧಿಗಾಗಿ ಜನ ನಮ್ಮನ್ನು ಆಯ್ಕೆ ಮಾಡಿದ್ದಾರೆ. ಸರ್ಕಾರ ಆಡಳಿತ ವರ್ಗವನ್ನು ಆಯ್ಕೆ ಮಾಡಿದೆ. ಜನಪರ, ಸಮಾಜಮುಖಿ ಧೋರಣೆ ಇದ್ದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು, ಸಂವಿಧಾನದ ಆಶಯಗಳನ್ನು ಈಡೇರಿಸಲು ಸಾಧ್ಯವಾಗುತ್ತದೆ. ಸಂವಿಧಾನ ಅರಿತು ಅದರಂತೆ ನಡೆಯಬೇಕಿದೆ. ಈ ದಿಕ್ಕಿನಲ್ಲಿ ಪ್ರಯತ್ನ ಮಾಡೋಣ. ಜನರ ನಿರೀಕ್ಷೆ ಹುಸಿಯಾಗದ ರೀತಿ ಕೆಲಸ ಮಾಡಬೇಕಿದೆ” ಎಂದು ಭರವಸೆ ನೀಡಿದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು, ನಜೀರ್ ಅಹ್ಮದ್ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸರ್ಕಾರದ ಅಭಿವೃದ್ಧಿ ಆಯುಕ್ತರು ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಬರೆದಿರುವ ‘ಸುಸ್ಥಿರ ಬದುಕಿನ ಸುತ್ತ ಆಶಾಕಿರಣ’ ಪುಸ್ತಕವನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದರು. ಹಿರಿಯ ಅಧಿಕಾರಿಗಳು ಗೃಹ ಕಚೇರಿ ಕಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಬುಕ್ಕೆಗಳನ್ನು ನೀಡಿ ಹೊಸ ವರ್ಷದ ವಿಶ್​ ಮಾಡಿದರು.


Share with

Leave a Reply

Your email address will not be published. Required fields are marked *