
ಕೊರಟಗೆರೆ: ಸತತ 2 ಗಂಟೆ ಸುರಿದ ಮಳೆಗೆ ಕೊರಟಗೆರೆ ಪಟ್ಟಣ ಮತ್ತು ಗ್ರಾಮೀಣ ಭಾಗದ ರಸ್ತೆಗಳೆಲ್ಲ ಜಲಾವೃತವಾಗಿ ಸುಮಾರು 60 ಮನೆ ಮತ್ತು 40ಕ್ಕೂ ಹೆಚ್ಚು ಅಂಗಡಿಗಳಿಗೆ ನೀರು ನುಗ್ಗಿದೆ. ರಾತ್ರಿ ಸುರಿದ ಮಳೆಯಿಂದ ಬಿತ್ತನೆ ಮಾಡಿದ್ದ ಕೃಷಿ ಬೆಳೆಗಳೆಲ್ಲ ಮಳೆಯ ನೀರಿನಲ್ಲಿ ಮುಳುಗಿ ರೈತರಿಗೆ ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ.

ರಸ್ತೆಗಳೆಲ್ಲ ಜಲಾವೃತವಾದ್ದರಿಂದ ವಾಹನಗಳೆಲ್ಲ ನೀರಿನಲ್ಲಿ ತೇಲಿ ಕೆಟ್ಟು ಹೋಗಿವೆ. ಪಟ್ಟಣದ ಮುಖ್ಯರಸ್ತೆಯ ಸಂಚಾರ ಕಡಿತಗೊಂಡಿತು. ವಸತಿ ನಿಲಯಕ್ಕೆ ನೀರು ನುಗ್ಗಿ ದವಸ ಧಾನ್ಯ ಎಲ್ಲವೂ ನೀರು ಪಾಲಾಗಿದ್ದು, ಬುಡಮಾರನಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯು ಕೊಚ್ಚಿ ಹೋಗಿ ಸಂಪರ್ಕವೇ ಕಡಿತವಾಗಿದೆ.
40 ಅಂಗಡಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮತ್ತು ಮುಖ್ಯಚರಂಡಿ ಒತ್ತುವರಿ ಆಗಿರುವ ಪರಿಣಾಮ ಕೊರಟಗೆರೆ ಪಟ್ಟಣದ ಕನಕದಾಸ ವೃತ್ತ ಹಾಗೂ ಶಿವಗಂಗಾ ಚಿತ್ರಮಂದಿರ ಸಮೀಪದ ಮುಖ್ಯರಸ್ತೆಯ 40ಕ್ಕೂ ಅಧಿಕ ಅಂಗಡಿಗಳಿಗೆ ಮಳೆನೀರು ನುಗ್ಗಿದೆ. ಮಳೆಯ ನೀರಿಗೆ ಹಣ್ಣಿನ ಅಂಗಡಿ, ಸಿಮೆಂಟ್ ಮತ್ತು ಬಟ್ಟೆ ಅಂಗಡಿಗಳಿಗೆ ನೀರು ಹರಿದು ಅವಾಂತರ ಸೃಷ್ಟಿಸಿ ಲಕ್ಷಾಂತರ ರೂಪಾಯಿ ನಷ್ಟವಾಗಿವೆ.




