ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ! ಕೊನೆಗೂ ಸೆರೆ ಸಿಕ್ತು ಕಿಲ್ಲರ್ ಒಂಟಿ ಸಲಗ

Share with

ಚಿಕ್ಕಮಗಳೂರು, ಫೆಬ್ರವರಿ 22: ಕೆಲ ದಿನಗಳ ಹಿಂದಷ್ಟೇ ತಾಲ್ಲೂಕಿನ ಹುಣಸೆಹಳ್ಳಿ  (Chikkamagaluru) ಗ್ರಾಮದಲ್ಲಿ ನಾಗೇಶ್ ಗೌಡ ಅವರಿಗೆ ಸೇರಿದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ 50 ವರ್ಷದ ಕಾರ್ಮಿಕ ಯಲ್ಲಪ್ಪ ಆನೆ ದಾಳಿಗೆ ಬಲಿಯಾಗಿದ್ದರು.  ಈ  ಘಟನೆ ನಡೆದು ಒಂದು ವಾರದಲ್ಲೇ ಅದೇ ಕಾಫಿತೋಟದಲ್ಲಿ ಕಾಡಾನೆ ದಾಳಿಗೆ ಇನ್ನೊಂದು ಜೀವ ಬಲಿಯಾಗಿದೆ. ಹೊಸಪೇಟೆ ಮೂಲದ ಬೋರಮ್ಮ (34) ಕಾಡಾನೆ ದಾಳಿಯಲ್ಲಿ ಮೃತಪಟ್ಟ ಕಾರ್ಮಿಕ ಮಹಿಳೆ. ಈ ಘಟನೆಯ ಬಳಿಕ ವೇಗದಿಂದ ಸಾಗಿದ ಆನೆ ಸೆರೆ ಕಾರ್ಯಾಚರಣೆಯು ಇದೀಗ ಯಶಸ್ವಿಯಾಗಿದೆ.

ಏಳು ದಿನಗಳಲ್ಲಿ ಎರಡನೇ ಬಲಿ
ಕಾಫಿತೋಟಕ್ಕೆ ಕೆಲಸಕ್ಕೆ ತೆರಳುತ್ತಿದ್ದ ಮಹಿಳೆ ಮೇಲೆ ಏಕಾಏಕಿ ಕಾಡಾನೆ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಬೋರಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇದೇ ತೋಟದಲ್ಲಿ ಕಳೆದ ಏಳು ದಿನಗಳ ಹಿಂದೆ ಹಾವೇರಿ ಮೂಲದ ಕಾರ್ಮಿಕ ಯಲ್ಲಪ್ಪ ಎಂಬವರು ಕೂಡ ಕಾಡಾನೆ ದಾಳಿಗೆ ಬಲಿಯಾಗಿದ್ದರು. ಏಳು ದಿನಗಳ ಅಂತರದಲ್ಲಿ ಎರಡನೇ ಬಲಿ ಸಂಭವಿಸಿರುವುದು ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ.

ಕಾರ್ಯಾಚರಣೆ ಯಶಸ್ವಿ
ಏಳು ಕುಮ್ಕಿ ಆನೆಗಳು ಹಾಗೂ ಸುಮಾರು 75 ಸಿಬ್ಬಂದಿಗಳ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಹಿಳೆಗೆ ದಾಳಿ ನಡೆಸಿದ ಸ್ಥಳದಿಂದ ಅಲ್ಪ ದೂರದಲ್ಲಿರುವ ಕಾಫಿ ತೋಟದಲ್ಲಿ ಕಾಡಾನೆಯನ್ನು ಪತ್ತೆ ಮಾಡಲಾಯಿತು. ಸೂಕ್ತ ಸಮಯದಲ್ಲಿ ಅರವಳಿಕೆ ಚುಚ್ಚುಮದ್ದು ನೀಡಿ ಆನೆಯನ್ನು ನಿತ್ರಾಣಗೊಳಿಸಿ, ಬಳಿಕ ಕುಮ್ಕಿ ಆನೆಗಳ ಸಹಾಯದಿಂದ ಕಾಡಾನೆಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ಪಡೆದು ಸೆರೆ ಹಿಡಿಯಲಾಗಿದೆ.

ಕಾಫಿ ತೋಟಗಳಿಗೆ ಕೆಲಸಕ್ಕೆ ತೆರಳಬಾರದು ಎಂದು ಅರಣ್ಯ ಇಲಾಖೆ ಮುನ್ನೆಚ್ಚರಿಕೆ ಸೂಚನೆ ನೀಡಿದ್ದರೂ, ಜೀವನೋಪಾಯದ ಅನಿವಾರ್ಯತೆಯಿಂದ ಕಾರ್ಮಿಕರು ತೋಟಗಳಿಗೆ ತೆರಳುತ್ತಿರುವುದು ದುರಂತಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಗ್ರಾಮಸ್ಥರ ಆಕ್ರೋಶ
ಈ ಮಧ್ಯೆ ಮಹಿಳೆಯ ಮೃತದೇಹವನ್ನು ಸಾಗಿಸುತ್ತಿದ್ದ ವಾಹನವನ್ನು ಚಿಕ್ಕಮಗಳೂರು ತಾಲೂಕಿನ ಕಡಬಗೆರೆ ಗ್ರಾಮದಲ್ಲಿ ಸ್ಥಳೀಯರು ತಡೆದು ಆಕ್ರೋಶ ವ್ಯಕ್ತಪಡಿಸಿದರು. ರಸ್ತೆ ಮಧ್ಯೆ ಶವವಿಟ್ಟು ಪ್ರತಿಭಟನೆ ನಡೆಸಿದ ನೂರಾರು ಗ್ರಾಮಸ್ಥರು ಸಂತ್ರಸ್ತ ಕುಟುಂಬಕ್ಕೆ ಸಮರ್ಪಕ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.


Share with

Leave a Reply

Your email address will not be published. Required fields are marked *