ಲಕ್ನೋ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಉದ್ಘಾಟನೆಗೆ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಜನವರಿ 22ರಂದು ನಡೆಯಲಿರುವ ರಾಮ ಮಂದಿರದ ‘ಪ್ರಾಣ ಪ್ರತಿಷ್ಠಾ’ ಸಮಾರಂಭಕ್ಕೂ ಮುನ್ನ ಭಯೋತ್ಪಾದಕ ನಿಗ್ರಹ ದಳ ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.


ಉತ್ತರ ಪ್ರದೇಶದ ವಿಶೇಷ ಪೊಲೀಸ್ ಮಹಾನಿರ್ದೇಶಕರಾದ ಪ್ರಶಾಂತ್ ಕುಮಾರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳವು ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದು, ಅವರ ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ ಮತ್ತು ಪೊಲೀಸ್ ಪ್ರಧಾನ ಕಚೇರಿಯ ಸೂಚನೆಯ ಮೇರೆಗೆ ನಡೆಸುತ್ತಿರುವ ತಪಾಸಣೆ ಅಭಿಯಾನದ ಅಂಗವಾಗಿ, ಅಯೋಧ್ಯೆ ಜಿಲ್ಲೆಯ ಯುಪಿ-ಎಟಿಎಸ್ನಿಂದ ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ಬಂಧಿಸಲಾಗಿದೆ. ಈ ಶಂಕಿತರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ವಿಚಾರಣೆಯ ವೇಳೆ ಇಲ್ಲಿಯವರೆಗೆ ಯಾವುದೇ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಇರುವುದು ಬೆಳಕಿಗೆ ಬಂದಿಲ್ಲ ಎಂದಿದ್ದಾರೆ. ಉತ್ತರ ಪ್ರದೇಶ ಸರ್ಕಾರವು ಡ್ರೋನ್ಗಳ ಮೂಲಕ ಕಣ್ಗಾವಲು ಹೆಚ್ಚಿಸುವ ಮೂಲಕ ನಗರದಲ್ಲಿ ಭದ್ರತೆಯನ್ನು ಬಿಗಿಗೊಳಿಸಿದೆ.




