ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಖಾಸಗಿ ಬಸ್ ಬೆಂಕಿಗಾಹುತಿಯಾದ ಘಟನೆ ಗುರುವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.ಅದೃಷ್ಟವಷಾತ್ ಬಸ್ಸಿನಲ್ಲಿದ್ದ ಏಳು ಮಂದಿ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.

ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ನಿರ್ವಾಹಕರು ಸಮಯಪ್ರಜ್ಞೆ ಮೆರೆದು ಪ್ರಯಾಣಿಕರನ್ನು ಕೂಡಲೇ ಕೆಳಗಿಳಿಸಿದ್ದಾರೆ. ಹೀಗಾಗಿ ಭಾರಿ ಅನಾಹುತವೊಂದು ತಪ್ಪಿದ್ದು, ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಸ್ಸಿನ ಇಡಿಸಿ ಬಾಕ್ಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನುವ ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ.
ಘಟನೆ ಕುರಿತು ಮಾಹಿತಿ ಲಭಿಸಿದ ತತ್ ಕ್ಷಣ ಉಡುಪಿ ಅಗ್ನಿಶಾಮಕ ದಳದ ಸಿಬಂದಿ ಸ್ಥಳಕ್ಕೆ ಧಾವಿಸಿದರು. ಬಳಿಕ ಕಾರ್ಯಾಚರಣೆ ನಡೆಸಿ ಬಸ್ಸಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.




