
ಬೆಳ್ತಂಗಡಿ: ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎಂಬ ಕಾರಣ ನೀಡಿ ಇಬ್ಬರು ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪದ್ಮುಂಜ ಸರ್ಕಾರಿ ಪ್ರೌಢ ಶಾಲೆಯೊಂದರಲ್ಲಿ ನಡೆದಿದೆ.

ಮುಖ್ಯ ಶಿಕ್ಷಕರು 100 ಪರ್ಸೆಂಟ್ ಫಲಿತಾಂಶ ದಾಖಲಿಸಬೇಕೆಂಬ ದುರುದ್ದೇಶದಿಂದಲೇ ಓದೋದರಲ್ಲಿ ಹಿಂದುಳಿದ ಇಬ್ಬರು ವಿದ್ಯಾರ್ಥಿನಿಯರಿಗೆ ಹಾಲ್ ಟಿಕೆಟ್ ಕೊಟ್ಟಿಲ್ಲ. ಹೀಗಾಗಿ ನಮ್ಮ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಇತ್ತ ವಿದ್ಯಾರ್ಥಿನಿಯರು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಡಿಡಿಪಿಐ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ರಾಜ್ಯ ಎಸ್ಡಿಎಂಸಿ ಸಮನ್ವಯ ವೇದಿಕೆಗೆ ಪತ್ರ ಬರೆದು ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.
ಇದರ ಬೆನ್ನಲ್ಲೇ ನಿನ್ನೆ ಶಾಲೆಗೆ ಭೇಟಿ ನೀಡಿದ್ದ ಬಿಇಓ ಹಾಲ್ ಟಿಕೆಟ್ ಕೊಡಿಸಿದ್ದು, ಉಳಿದ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದ್ದಾರೆ.




