ಕಲಬುರಗಿ: ಬಿಜೆಪಿ ಕಾರ್ಯಕರ್ತೆಯೊಬ್ಬರು ಮೈ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಸಮೀಪ ನಂದಿಕೂರ ಗ್ರಾಮದಲ್ಲಿ ಸಂಭವಿಸಿದೆ.

ಜ್ಯೋತಿ ಚಿದಾನಂದ ಸಿರಗೋಳಿ (34 ವ) ಎನ್ನುವ ಮಹಿಳೆಯೇ ಆತ್ಮಹತ್ಯೆ ಮಾಡಿಕೊಂಡ ಕಾರ್ಯಕರ್ತೆಯಾಗಿದ್ದು, ಈಕೆ ಬ್ರಹ್ಮಪುರ ಪ್ರದೇಶದಲ್ಲಿ ವಾಸವಾಗಿದ್ದರು.
ಎಳ್ಳಾಮಾವಾಸೆಯಾದ ಶುಕ್ರವಾರದಂದು ಸಂಜೆ 7 ಗಂಟೆ ಸುಮಾರಿಗೆ ನಂದಿಕೂರ ಗ್ರಾಮದ ಬಿಜೆಪಿ ಕಾರ್ಯಕರ್ತ ಮಲ್ಲಿನಾಥ ಬಿರಾದಾರ ಮನೆಗೆ ತೆರಳಿ ಬಾಗಿಲು ಬಡಿದಿದ್ದಾರೆ. ಅಲ್ಲಿ ಬಾಗಿಲು ತೆರೆಯುತ್ತಿದ್ದಂತೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡರು. ಜ್ಯೋತಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಘಟನೆ ನಂತರ ಮಲ್ಲಿನಾಥ ಬಿರಾದಾರ ಪರಾರಿಯಾಗಿದ್ದು, ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಈ ಘಟನೆ ಕುರಿತು ಜ್ಯೋತಿ ಪತಿ ಚಿದಾನಂದ ದೂರು ನೀಡಿದ್ದಾರೆ. ಹಣದ ವ್ಯವಹಾರ ಹಾಗೂ ಇತರೆ ಸಂಶಯವೇ ಆತ್ಮಹತ್ಯೆಗೆ ಕಾರಣವಾಗಿದೆ ಎಂದು ಉಲ್ಲೇಖಿಸಲಾಗಿದೆ.
ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ಹುಸೇನ್ ಭಾಷಾ ಅವರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.




