
ಉಡುಪಿ: ವಾಲ್ಮೀಕಿ ನಿಗಮ ಹಗರಣ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಇಂದು ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಜಿಲ್ಲಾಧಿಕಾರಿ ಕಚೇರಿ ಆವರಣದ ಗೇಟಿನ ಎದುರು ನೆರೆದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಒಳನುಗ್ಗಲು ಪ್ರಯತ್ನಿಸಿದರು. ಆದರೆ ಪೊಲೀಸರು ಗೇಟು ಹಾಕಿ ಪ್ರತಿಭಟನಕಾರರು ಒಳ ಪ್ರವೇಶಿಸಿದಂತೆ ತಡೆದರು. ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯನ್ನು ಲೆಕ್ಕಿಸದೆ ಜಿಲ್ಲಾಧಿಕಾರಿ ಕಚೇರಿ ಗೇಟ್ ಅನ್ನು ತಳ್ಳಿಕೊಂಡು ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆಹಿಡಿದರು. ಈ ವೇಳೆ ಕೆಲಕಾಲ ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯೆ ಸಂಘರ್ಷ ಉಂಟಾಯಿತು. ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಕಾರ್ಯಕರ್ತರು ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಸ್ಥಳಕ್ಕೆ ಆಗಮಿಸಿದ ಅಪರ ಜಿಲ್ಲಾಧಿಕಾರಿ ವೀಣಾ ಪ್ರತಿಭಟನಕಾರರಿಂದ ಮನವಿ ಸ್ವೀಕರಿಸಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.





