ಬೆಂಗಳೂರು : ಡಿ.ಕೆ.ಶಿವಕುಮಾರ್ ಅವರು ಸದನದಲ್ಲಿ ಆರೆಸ್ಸೆಸ್ ಗೀತೆ ಹಾಡಿರುವುದನ್ನು ಬಿಜೆಪಿಯವರು ಸಮರ್ಥಿಸಿಕೊಳ್ಳುತ್ತಾರೆ. ಡಿಕೆಶಿಯವರು ಉಪಮುಖ್ಯಮಂತ್ರಿಗಳಾಗಿ ಸಂಘದ ಪ್ರಾರ್ಥನೆ ಮಾಡುವುದರಲ್ಲಿ ನಮ್ಮದೇನು ಅಭ್ಯಂತರ ಇಲ್ಲ. ಆದರೆ, ಕೆಪಿಸಿಸಿ ಅಧ್ಯಕ್ಷರಾಗಿ ಆರೆಸ್ಸೆಸ್ ಗೀತೆ ಹಾಡಿದ್ದರೆ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ನ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಆಗ್ರಹಿಸಿದ್ದಾರೆ.

ಹೊಸದಿಲ್ಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರೆಸ್ಸೆಸ್ ಅನ್ನು ಈ ದೇಶದಲ್ಲಿ ಮೂರು ಬಾರಿ ಈಗಾಗಲೇ ನಿಷೇಧ ಮಾಡಲಾಗಿದೆ. ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿಗಳಾಗಿ ಸಂಘದ ಪ್ರಾರ್ಥನೆ ಮಾಡುವುದರಲ್ಲಿ ನಮ್ಮದೇನು ಅಭ್ಯಂತರ ಇಲ್ಲ. ಯಾಕಂದರೆ ಸರಕಾರ ಎನ್ನುವಂತಹದ್ದು ಅದು ಒಂದು ಪಕ್ಷದ ಸರಕಾರ ಅಲ್ಲ, ಅದು ಇಡೀ ಏಳು ಕೋಟಿ ಕರ್ನಾಟಕದ ಜನತೆಯ ಸರಕಾರ. ಅದರಲ್ಲಿ ಆರೆಸ್ಸೆಸ್ನವರೂ ಇದ್ದಾರೆ, ಜಮಾತೆ ಇಸ್ಲಾಮಿಯವರೂ ಇದ್ದಾರೆ, ಎಲ್ಲರೂ ಇದ್ದಾರೆ ಎಂದು ಹೇಳಿದರು.




