ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ನಡೆಸುತ್ತಿದ್ದು, 12 ಮಂದಿ ಆರೋಪಿಗಳನ್ನು ತಮ್ಮ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಸ್ಫೋಟಕ ಮಾಹಿತಿ ಬಾಯಿ ಬಿಟ್ಟಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆಗೆ ನೆರವು ನೀಡಿದವರ ಬಗ್ಗೆ ಆರೋಪಿಗಳಿಂದ ಎನ್ಐಎ ತಂಡ ಮಾಹಿತಿ ಕಲೆ ಹಾಕಿತ್ತಿದೆ.

ಬಂಧಿತ ಬಹುತೇಕ ಆರೋಪಿಗಳಿಗೆ ನಿಷೇಧಿತ ಪಿಎಫ್ಐ ಸಂಘಟನೆ ಜೊತೆ ನಂಟಿದೆ. ಅಲ್ಲದೆ, ಪಿಎಫ್ಐ ಜೊತೆ ಗುರುತಿಸಿಕೊಂಡು ವಿದೇಶದಲ್ಲಿರುವ ಕೆಲವರು ಇವರಿಗೆ ಹಣದ ನೆರವು ನೀಡಿದ್ದಾರೆ. ಜೊತೆಗೆ ಸುಹಾಸ್ ಶೆಟ್ಟಿ ಹತ್ಯೆಗೆ ನೆರವು ನೀಡಿದವರು ಮಂಗಳೂರು ಮತ್ತು ವಿದೇಶದಲ್ಲಿದ್ದು, ಅವರ ಹೆಸರುಗಳನ್ನು ಆರೋಪಿಗಳು ಎನ್ಐಎ ಅಧಿಕಾರಿಗಳ ಮುಂದೆ ಹೇಳಿದ್ದಾರೆ. ಸದ್ಯ ಎನ್ಐಎ ಅಧಿಕಾರಿಗಳು ಸುಹಾಸ್ ಶೆಟ್ಟಿ ಹತ್ಯೆ ಹಿಂದೆ ಪಿಎಫ್ಐ ನಂಟಿನ ಬಗ್ಗೆ ಸಾಕ್ಷ್ಯ ಸಂಗ್ರಹಿಸುತ್ತಿದ್ದಾರೆ.
ಸುಹಾಸ್ ಹತ್ಯೆಗೆ ವಿದೇಶದಿಂದ ಫಂಡಿಂಗ್
ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳ ಬ್ಯಾಂಕ್ ಖಾತೆಗಳಿಗೆ ವಿದೇಶದಿಂದ ಹಣ ಸಂದಾಯವಾಗಿದೆ. ಸದ್ಯ ಎನ್ಐಎ ಅಧಿಕಾರಿಗಳು 12 ಆರೋಪಿಗಳ ಬ್ಯಾಂಕ್ ಖಾತೆ ವಿವರ ಸಂಗ್ರಹಿಸುತ್ತಿದ್ದಾರೆ. ಕೆಲ ಸ್ಥಳೀಯ ವ್ಯಕ್ತಿಗಳಿಂದಲೂ ಆರೋಪಿಗಳ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿದೆ ಎಂದು ಎನ್ಐಎ ತನಿಖೆ ವೇಳೆ ತಿಳಿದುಬಂದಿದೆ. ಪ್ರಕರಣದ ತನಿಖೆಯನ್ನು ಎನ್ಐಎ DySP ಪವನ್ ಕುಮಾರ್ ನೇತೃತ್ವದ ತಂಡ ನಡೆಸುತ್ತಿದೆ.
ಎನ್ಐಎ ತನಿಖೆಗೆ ಆಗ್ರಹಿಸಿದ್ದ ಕುಟುಂಬಸ್ಥರು
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಪೊಲೀಸರು ತನಿಖೆ ನಡೆಸಲು ಆರಂಭಿಸಿದಾಗ ಎನ್ಐಎಗೆ ಕೊಡುವ ಅಗತ್ಯವಿಲ್ಲ ರಾಜ್ಯ ಸರ್ಕಾರ ಹೇಳಿತ್ತು. ಆದರೆ, ಸುಹಾಸ್ ಶೆಟ್ಟಿ ಹೆತ್ತವರು ಎನ್ಐಎ ತನಿಖೆ ಮೂಲಕ ಮಾತ್ರ ತಮ್ಮ ಮಗನ ಸಾವಿಗೆ ನ್ಯಾಯ ಸಿಗುತ್ತೆ ಎಂದು ಹೇಳಿದ್ದರು. ಈ ನಡುವೆ ಸುಹಾಸ್ ಶೆಟ್ಟಿ ಹೆತ್ತವರು ರಾಜ್ಯಪಾಲರ ಮೂಲಕ ಪ್ರಕರಣವನ್ನು ಎನ್ಐಎಗೆ ನೀಡಲು ಒತ್ತಾಯಿಸಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಸಂಸದ, ಶಾಸಕರು ಈ ಹತ್ಯೆಯ ಹಿಂದಿರುವ ಶಕ್ತಿಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಗಮನಕ್ಕೂ ತಂದಿದ್ದರು. ಈ ಹಿನ್ನಲೆಯಲ್ಲಿ ಕೇಂದ್ರ ಗೃಹ ಇಲಾಖೆಯೇ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್ಐಎಗೆ ವಹಿಸಿತ್ತು. ಇದೀಗ ಆರೋಪಿಗಳನ್ನು ವಶಕ್ಕೆ ಪಡೆದ ಎನ್ಐಎ ಎಲ್ಲ 12 ಆರೋಪಿಗಳ ವಿಚಾರಣೆ ನಡೆಸುತ್ತಿದೆ.




