ಹೆಬ್ರಿ : ಚಕ್ಕರಮಕ್ಕಿ ಶೇಡಿಮನೆ ಗ್ರಾಮದಲ್ಲಿ ಮೂರೂವರೆ ವರ್ಷದ ಮಗು ಮೇಲೆ ತೀವ್ರವಾಗಿ ಹಲ್ಲೆ ಮಾಡಿರುವ ಅಮಾನವೀಯ ಘಟನೆಯೊಂದು ನಡೆದಿದೆ. ಇದರಿಂದ ಮಗು ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿದೆ. ಪ್ರೇರಿತ್ ಹಲ್ಲೆಗೊಳಗಾದ ಮಗು. ಆರೋಗ್ಯದಲ್ಲಿ ಸಮಸ್ಯೆ ಇದೆ ಎಂದು ಪ್ರೇರಿತ್ನನ್ನು ಪೋಷಕರು ಸೆ.12ರಂದು ಬೆಳಿಗ್ಗೆ ಉಡುಪಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಪ್ರೇರಿತ್ಗೆ ಚಿಕಿತ್ಸೆ ನೀಡುವ ವೇಳೆ ವೈದ್ಯರು ಆತನ ಮೈ ಮೇಲಿನ ಗಾಯದ ಗುರುತುಗಳನ್ನು ಕಂಡಿದ್ದಾರೆ.
ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು, ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಕೆಎಂಸಿ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಈ ವಿಚಾರವನ್ನು ವೈದ್ಯರು ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಯ ಗಮನಕ್ಕೆ ತಂದಿದ್ದಾರೆ. ಬಳಿಕ, ಡಿಹೆಚ್ಒ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ವಿಚಾರ ತಿಳಿಸಿದ್ದಾರೆ. ವಿಚಾರ ತಿಳಿದ ಕೂಡಲೇ ಜಿಲ್ಲಾ ಮಕ್ಕಳ ರಕ್ಷಣಾ ಘಟಕದವರು ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರಿಂದ ಮಾಹಿತಿ ಪಡೆದಿದ್ದಾರೆ. ನಂತರ, ಅಮಾವಾಸ್ಯೆಬೈಲು ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇನ್ನು, ಮಗುವಿನ ಮೇಲಾದ ಗಾಯದ ಬಗ್ಗೆ ಪ್ರೇರಿತ್ ತಾಯಿ ಪೂರ್ಣಪ್ರಿಯಾ ಸ್ಪಷ್ಟ ಮಾಹಿತಿ ನೀಡದೆ ತಡವರಿಸಿದ್ದಾರೆ ಎಂದು ವರದಿಯಾಗಿದೆ.