ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ಬೆಳ್ತಂಗಡಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ರಂಜನ್ ರಾವ್ ಯರ್ಡೂರು ದಾಖಲಿಸಿದ್ದ ಕ್ರಿಮಿನಲ್ ಕೇಸನ್ನು ಹೈಕೋರ್ಟ್ ವಜಾಗೊಳಿಸಿ ತೀರ್ಪು ನೀಡಿದೆ.
ತೀರ್ಪಿನ ವಿವರ:


2016ನೇ ಇಸವಿಯಲ್ಲಿ ರಂಜನ್ ರಾವ್ ಯರ್ಡೂರು ಅವರು ಬೆಳ್ತಂಗಡಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿದ್ದರು. ಗ್ರಾಮಾಭಿವೃದ್ಧಿ ಯೋಜನೆಗೆ ಹಣಕಾಸು ವ್ಯವಹಾರ ನಡೆಸಲು ಅನುಮತಿ ಇಲ್ಲ. ಅಕ್ರಮವಾಗಿ ಬಡ್ಡಿಗೆ ಹಣ ನೀಡಲಾಗುತ್ತಿದೆ. ನಿಯಮ ಉಲ್ಲಂಘಿಸಿ ಜಾಸ್ತಿ ಬಡ್ಡಿ ವಿಧಿಸಲಾಗುತ್ತಿದೆ.
ಆದ್ದರಿಂದ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತನ್ನ ದೂರಿನಲ್ಲಿ ಮನವಿ ಮಾಡಿದ್ದ ರಂಜನ್ ರಾವ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯಸ್ಥರೂ ಆಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಮತ್ತಿತರರನ್ನು ಪ್ರತಿವಾದಿಯನ್ನಾಗಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಬೆಳ್ತಂಗಡಿ ನ್ಯಾಯಾಲಯ ಪೊಲೀಸ್ ತನಿಖೆಗೆ ಆದೇಶ ನೀಡಿತ್ತು.
ಇದನ್ನು ಪ್ರಶ್ನಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವರು ಪ್ರಸಿದ್ಧ ಹಿರಿಯ ನ್ಯಾಯವಾದಿ ಪಿ.ಪಿ. ಹೆಗ್ಡೆ ಅವರ ಮೂಲಕ ಹೈಕೋರ್ಟ್ ಮೆಟ್ಟಿಲೇರಿದ್ದರು. ನಂತರ ಪೊಲೀಸ್ ತನಿಖೆಗೆ ಆದೇಶಿಸಿದ್ದ ಬೆಳ್ತಂಗಡಿ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿತ್ತು. ಆನಂತರ ವಾದ ಪ್ರತಿವಾದ ಮುಂದುವರಿದಿತ್ತು. ಗ್ರಾಮಾಭಿವೃದ್ಧಿ ಯೋಜನೆ ಪರವಾಗಿ ವಾದ ಮಂಡಿಸಿದ್ದ ಪಿ.ಪಿ.ಹೆಗ್ಡೆ ಅವರು ಕೇಂದ್ರ ಸರಕಾರ ಮತ್ತು ಆರ್.ಬಿ.ಐ. ನಿಯಮದಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯ ನಿರ್ವಹಿಸುತ್ತಿದೆ.
ಯಾವುದೇ ಅಕ್ರಮ ವ್ಯವಹಾರ ನಡೆಯುತ್ತಿಲ್ಲ. ದಾನ, ಧರ್ಮ ಮಾಡುತ್ತಿರುವ ಶ್ರೀಕ್ಷೇತ್ರ ಧರ್ಮಸ್ಥಳದ ಮೂಲಕ ಸ್ವಸಹಾಯ ಸಂಘ ಯೋಜನೆಯನ್ನು ಜಾರಿ ಮಾಡಲಾಗುತ್ತಿದ್ದು ಸಂಪೂರ್ಣ ಕಾನೂನುಬದ್ಧವಾಗಿದೆ ಎಂದು ನ್ಯಾಯಪೀಠದ ಗಮನ ಸೆಳೆದಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ದುರುದ್ದೇಶಪೂರ್ವಕವಾಗಿ ದೂರು ನೀಡಲಾಗುತ್ತಿದೆ. ಕ್ಷೇತ್ರದ ಪಾವಿತ್ರತ್ಯತೆ ಕೆಡಿಸುವುದೇ ಇಂತವರ ದುರುದ್ದೇಶವಾಗಿದೆ. ನಿರಂತರವಾಗಿ ಸುಳ್ಳು ದೂರು ದಾಖಲಿಸಿ ಮಾನಹಾನಿ ಉಂಟು ಮಾಡಲಾಗುತ್ತಿದೆ ಎಂದು ವಾದ ಮಂಡಿಸಿದ್ದ ಪಿ.ಪಿ.
ಹೆಗ್ಡೆ ಅವರು ಸುಪ್ರೀಂಕೋರ್ಟ್ ಸಹಿತ ವಿವಿಧ ನ್ಯಾಯಾಲಯಗಳು ನೀಡಿದ್ಸ ತೀರ್ಪುಗಳನ್ನು ನ್ಯಾಯಪೀಠದ ಗಮನಕ್ಕೆ ತಂದಿದ್ದರು. ಇವರ ವಾದ ಪುರಸ್ಕರಿಸಿರುವ ಹೈಕೋರ್ಟ್ ನ್ಯಾಯಮೂರ್ತಿಗಳು ಜ.9ರಂದು ಅಂತಿಮ ತೀರ್ಪು ಪ್ರಕಟಿಸಿದ್ದು ರಂಜನ್ ರಾವ್ ಯರ್ಡೂರು ಅವರು ಬೆಳ್ತಂಗಡಿ ನ್ಯಾಯಾಲಯದಲ್ಲಿ ದಾಖಲಿಸಿದ್ದ ದೂರನ್ನು ಸಂಪೂರ್ಣ ವಜಾ ಮಾಡಿ ಆದೇಶ ನೀಡಿದ್ದಾರೆ.
ಅಲ್ಲದೆ ಪ್ರತಿಷ್ಠಿತ ಕ್ಷೇತ್ರದ ಹೆಸರು ಕೆಡಿಸಲು ಇಂಥ ದೂರು ನೀಡಲಾಗಿದೆ. ಮಾನಹಾನಿ ಉಂಟು ಮಾಡುವ ಹಾಗೂ ಪ್ರಚಾರ ಪಡೆಯುವ ದುರುದ್ದೇಶದಿಂದ ಸುಳ್ಳು ದೂರು ನೀಡಿರುವುದು ಕಂಡು ಬಂದಿದೆ ಎಂದು ನ್ಯಾಯಮೂರ್ತಿಗಳು ಆದೇಶದಲ್ಲಿ ಅಭಿಪ್ರಾಯ ಪಟ್ಟಿದ್ದಾರೆ.




