ಶಿವಮೊಗ್ಗ: ಎಲ್ಕೆಜಿಯಿಂದ ಎಸ್ಎಸ್ಎಲ್ಸಿವರೆಗೆ ಸರ್ಕಾರಿ ಮತ್ತು ಅನುದಾನಿತ ಶಾಲೆ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ನೋಟ್ಪುಸ್ತಕ, ಪಠ್ಯಪುಸ್ತಕ, ಮಧ್ಯಾಹ್ನದ ಬಿಸಿಯೂಟ, ಶೂ, ಸಾಕ್ಸ್, ಹಾಲು, ಮೊಟ್ಟೆ ಸೇರಿ ನೀಡಲಾಗುವ ಎಲ್ಲ ರೀತಿಯ ಸೌಲಭ್ಯಗಳನ್ನು ಪಪೂ ಶಿಕ್ಷಣದವರೆಗೆ ವಿಸ್ತರಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.

10ನೇ ತರಗತಿಯಲ್ಲಿ ಶೇ.100ರಷ್ಟು ಫಲಿತಾಂಶ ಪಡೆದು ಸಾಧನೆ ಮಾಡಿದ ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗಾಗಿ ಏರ್ಪಡಿಸಲಾಗಿದ್ದ ಅಭಿನಂದನಾ ಸಮಾರಂಭಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ಶೈಕ್ಷಣಿಕ ಸಾಲಿನ ಆರಂಭದೊಳಗಾಗಿ ಕೊರತೆ ಇರುವ 12,000 ಶಿಕ್ಷಕರ ನೇಮಕಾತಿಗೆ ಕ್ರಮ ವಹಿಸಲಾಗುವುದು. ರಾಜ್ಯದಲ್ಲಿ 2026ರ ಜನವರಿ ಮಾಸಾಂತ್ಯದೊಳಗಾಗಿ 900 ಕೆಪಿಎಸ್ ಶಾಲೆಗಳ ಆರಂಭಕ್ಕೆ ಮುನ್ನುಡಿ ಬರೆಯಲಾಗುವುದು. ಗುಣಾತ್ಮಕ ಶಿಕ್ಷಣ, ರಚನಾತ್ಮಕ ಕಲಿಕಾ ತರಗತಿಗಳನ್ನು ನಡೆಸಲು ಸಹಕಾರಿಯಾಗುವಂತೆ ಪ್ರತಿ ಶಾಲೆಗಳಲ್ಲಿ ಆಡಳಿತ ಮಂಡಳಿ ರಚನೆಯಂತಹ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಶಾಲೆಗಳ ನೋಂದಣಿ, ನವೀಕರಣ ಪ್ರಕ್ರಿಯೆಯನ್ನು ಇನ್ನಷ್ಟು ಸರಳೀಕರಣಗೊಳಿಸಲು ಸದನ ಸಮಿತಿ ರಚಿಸಲು ಸೂಚಿಸಲಾಗಿದೆ ಎಂದರು.




