ಮಂಗಳೂರು: ಕರ್ತವ್ಯ ಲೋಪ, ಹಿರಿಯ ಅಧಿಕಾರಿಗಳೊಂದಿಗೆ ಉಡಾಫೆಯ ವರ್ತನೆ, ಅಕ್ರಮ ಮರಳುಗಾರಿಕೆಗೆ ಬೆಂಬಲ, ಸ್ಥಳೀಯರಿಗೆ ಕಿರಿಕಿರಿ ಆರೋಪದ ಹಿನ್ನೆಲೆಯಲ್ಲಿ ಕಂಕನಾಡಿ ನಗರ ಠಾಣೆ ಇನ್ಸ್ಪೆಕ್ಟರ್ ಎಸ್.ಎಚ್ ಭಜಂತ್ರಿ ಅವರನ್ನು ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಆದೇಶಿಸಿದ್ದಾರೆ.


ನಗರದ ಜಪ್ಪಿನಮೊಗರು ಕಡೆಕಾರಿನಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಎಸಿಪಿ ಧನ್ಯಾ ನಾಯಕ್ ಅವರಿಗೆ ಮಾಹಿತಿ ಬಂದ ಹಿನ್ನಲೆಯಲ್ಲಿ ಭಜಂತ್ರಿ ಅವರಿಗೆ ಇದರ ವಿರುದ್ಧ ಕಾರ್ಯಾಚರಣೆ ನಡೆಸಲು ಎಸಿಪಿ ಧನ್ಯಾ ನಾಯಕ್ ಅವರು ಸೂಚಿಸಿದ್ದರು, ಆದರೆ ಭಜಂತ್ರಿ ಅವರು ಇದನ್ನು ನಿರ್ಲಕ್ಷಿಸಿದ್ದರು ಎನ್ನಲಾಗಿದೆ.
ಮರಳು ಮಾಫಿಯಾದೊಂದಿಗೆ ಶಾಮಿಲಾಗಿರುವುದು, ಹಿರಿಯ ಅಧಿಕಾರಿಯ ಆದೇಶ ಪಾಲಿಸದಿರುವುದು, ಠಾಣೆಗೆ ಭೇಟಿ ನೀಡಿದವರ ಜತೆಯೂ ಅಗೌರವ ತೋರಿರುವ ಬಗ್ಗೆ ಎಸಿಪಿ ಧನ್ಯ ನಾಯಕ್ ಅವರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರಿಗೆ ವರದಿ ನೀಡಿದ್ದರು. ಈ ಮಧ್ಯೆ ಭಜಂತ್ರಿ ಅವರು ನೆಲೆಸಿರುವ ಅಪಾರ್ಟ್ಮೆಂಟ್ನ ನಿವಾಸಿಗಳ ಜತೆಯೂ ಉಡಾಫೆಯಾಗಿ ವರ್ತಿಸುತ್ತಿದ್ದಾರೆ ಎಂಬ ಬಗ್ಗೆ ಅಲ್ಲಿನ ನಿವಾಸಿಗಳು ದೂರು ನೀಡಿದ್ದರು ಎನ್ನಲಾಗಿದೆ.
ಈ ಬಗ್ಗೆ ಸ್ವತಃ ಪೊಲೀಸ್ ಕಮಿಷನರ್ ಅವರೇ ಭಜಂತ್ರಿ ಅವರಲ್ಲಿ ಪ್ರತಿಕ್ರಿಯೆ ಕೇಳಿದಾಗ ಉಡಾಫೆಯಿಂದ ವರ್ತಿಸಿದ್ದಾರೆಂಬ ಆರೋಪವಿದೆ. ಈ ಹಿನ್ನಲೆಯಲ್ಲಿ ಪೊಲೀಸ್ ಕಮಿಷನರ್ ಅವರು ಭಜಂತ್ರಿಯನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.




