ಕ್ರೀಡಾಂಗಣ ಮಾತ್ರವಲ್ಲದೆ ಮೆಟ್ರೋ, ಬಸ್ ನಿಲ್ದಾಣಗಳಲ್ಲೂ ಮೊಬೈಲ್ ಕಳ್ಳತನ! 21 ಫೋನ್ಗಳನ್ನು ವಶಕ್ಕೆ ಪಡೆದ ಪೊಲೀಸರು

Share with

ಬೆಂಗಳೂರು, ಮಾರ್ಚ್ 31: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ ಐಪಿಎಲ್ ಪಂದ್ಯದ ವೇಳೆ ನಡೆದ ಮೊಬೈಲ್ಗಳ ಕಳ್ಳತನದ (Mobile Theft) ಬಗ್ಗೆ ಮಹಿಳೆಯೊಬ್ಬರು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿ ಒಟ್ಟು 21 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಮಾರ್ಚ್ 28ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಒಳಗೆ ಮಾತ್ರವಲ್ಲದೆ, ಮೆಟ್ರೋ ನಿಲ್ದಾಣ, ಬಸ್ ನಿಲ್ದಾಣ ಹಾಗೂ ರಸ್ತೆ ಬದಿಗಳಲ್ಲೂ ಆರೋಪಿಯು ಮೊಬೈಲ್ ಕಳವು ಮಾಡುತ್ತಿದ್ದನು ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ನಲ್ಲಿ ಸುಮಾರು 12 ಪ್ರಕರಣಗಳು ದಾಖಲಾಗಿದ್ದವು. ಬಂಧಿತ ಆರೋಪಿ ಅಪ್ರಾಪ್ತ ಬಾಲಕರನ್ನು ಸಹ ತನ್ನ ಜೊತೆ ಸೇರಿಸಿಕೊಂಡು ಕಳ್ಳತನ ನಡೆಸುತ್ತಿದ್ದ ವಿಚಾರವೂ ಬಹಿರಂಗವಾಗಿದ್ದು, ಇದೀಗ ಪೊಲೀಸರು ಕೆಲ ಬಾಲಕರನ್ನು ವಿಚಾರಣೆಗೊಳಪಡಿಸುತ್ತಿದ್ದಾರೆ.


ಪೊಲೀಸ್ ಆಯುಕ್ತರ ಎಚ್ಚರಿಕೆ
ಘಟನೆಯ ಹಿನ್ನೆಲೆ ನಗರ ಪೊಲೀಸ್ ಆಯುಕ್ತರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ವಿಶೇಷವಾಗಿ ಐಪಿಎಲ್ ಪಂದ್ಯಗಳಂತಹ ಹೆಚ್ಚಿನ ಜನಸಂದಣಿ ಇರುವ ಸ್ಥಳಗಳಿಗೆ ಹೋಗುವವರು ತಮ್ಮ ವೈಯಕ್ತಿಕ ವಸ್ತುಗಳ ಬಗ್ಗೆ ಹೆಚ್ಚು ಜಾಗ್ರತೆ ವಹಿಸಬೇಕು ಎಂದು ಸೂಚಿಸಲಾಗಿದೆ. ಮೊಬೈಲ್, ಪರ್ಸ್ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.


Share with

Leave a Reply

Your email address will not be published. Required fields are marked *