ಮೂಡುಬಿದಿರೆ: ಗಾಂಧೀಜಿ ನೇತೃತ್ವದಲ್ಲಿ ಸ್ವಾತಂತ್ರ್ಯ ಲಭಿಸಿದರೆ ಅಂಬೇಡ್ಕರ್ ನೇತೃತ್ವದಲ್ಲಿ ರಚನೆಯಾದ ಸಂವಿಧಾನ ದೇಶದ ಏಕತೆಯನ್ನು ಉಳಿಸಿದೆ, ನಾವೆಲ್ಲರೂ ಈ ಸಂವಿಧಾನದ ಇತಿಹಾಸ, ಅರ್ಥ ತಿಳಿದುಕೊಳ್ಳಬೇಕು. ರೈತರು, ಶೋಷಿತರು, ಬಡವರು ಸೇರಿದಂತೆ ದೇಶದ ಧ್ವನಿರಹಿತರೆಲ್ಲ ಇಷ್ಟೊಂದು ಧೈರ್ಯದಿಂದ ಇಲ್ಲಿ ಜೀವಿಸಲು ಕಾರಣವೇ ಡಾ| ಬಿ.ಆರ್. ಅಂಬೇಡ್ಕರ್ ಪ್ರಣೀತ ಸಂವಿಧಾನ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅಭಿಪ್ರಾಯಪಟ್ಟರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ವಿದ್ಯಾಗಿರಿಯಲ್ಲಿ ನಡೆದ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣಗೈದು ಸಂದೇಶ ನೀಡಿದ ಅವರು ಕರ್ನಾಟಕದಲ್ಲಿ ಭಾರತದ ಸಂಸ್ಕೃತಿಯ ಸಾರವನ್ನು ಕಾಣಬಹುದಾದರೆ, ಆಳ್ವಾಸ್ನಲ್ಲಿ ಕರ್ನಾಟಕದ ಸಾಂಸ್ಕೃತಿಕ ಸಾರ ಗೋಚರವಾಗುತ್ತಿದೆ. ಆಳ್ವಾಸ್ ನಮ್ಮ ಸಂಸ್ಕೃತಿ ಬಿಂಬಿಸುವ ಮಿನಿ ಭಾರತ. ಡಾ|ಆಳ್ವರ ದೇಶಪ್ರೇಮ ಎಲ್ಲರನ್ನೂ ಒಂದಾಗಿಸಿದೆ ಎಂದರು.
ವಂದೇ ಮಾತರಂ ಗಾಯನದ ಬಳಿಕ ಧ್ವಜಾರೋಹಣ ನಡೆಯಿತು. ಬಳಿಕ ರಾಷ್ಟ್ರಗೀತೆ ಹಾಡಲಾಯಿತು. ಬಳಿಕ ಕೋಟಿ ಕಂಠೋಂಸೇ ನಿಖ್ಲೇ ಹಾಡಿಗೆ ಸೇರಿದ್ದ 30 ಸಾವಿರಕ್ಕೂ ಅಧಿಕ ಮಂದಿ ಪುಟಾಣಿ ಧ್ವಜಗಳನ್ನು ಬೀಸುತ್ತಾ ದನಿಗೂಡಿಸಿದರು. ಆಳ್ವಾಸ್ ಸಂಸ್ಥೆಗಳ ಪರಿವಾರ, ಸಾರ್ವಜನಿಕರು ಸೇರಿದಂತೆ ಮೂವತ್ತು ಸಾವಿರಕ್ಕೂ ಅಧಿಕ ಮಂದಿ ಈ ದಾಖಲೆಯ ಗಣರಾಜ್ಯೋತ್ಸವಕ್ಕೆ ಸಾಕ್ಷಿಯಾದರು.
ಎನ್ಸಿಸಿ ಸೀನಿಯರ್ ಅಂಡರ್ ಆಫೀಸರ್ ಇಂದ್ರೇಶ್ ಗೌಡ ಅವರ ನೇತೃತ್ವದಲ್ಲಿ ಗೌರವ ರಕ್ಷೆ ನೀಡಲಾಯಿತು. ಆ ಬಳಿಕ ಎನ್ಸಿಸಿ ಸೀನಿಯರ್ ಅಂಡರ್ ಆಫೀಸರ್ ಹರ್ಷಾರೆಡ್ಡಿ ನೇತೃತ್ವದಲ್ಲಿ ಗೌರವ ವಂದನೆ ನೀಡಲಾಯಿತು.