
ನವದೆಹಲಿ, ಮೇ 27: ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ಇಂದು (ಮಂಗಳವಾರ) ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ 2ನೇ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿವಿಧ ವಿಭಾಗಗಳು ಮತ್ತು ಕ್ಷೇತ್ರಗಳ ಪುರಸ್ಕೃತರಿಗೆ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಕರ್ನಾಟಕದ ಖ್ಯಾತ ನಟ ಅನಂತನಾಗ್ (Anant Nag) ಅವರಿಗೆ ಪದ್ಮಭೂಷಣ, ಕರ್ನಾಟಕದ ವಯಲಿನ್ ವಾದಕ ಎಲ್. ಸುಬ್ರಹ್ಮಣ್ಯಂ ಅವರಿಗೆ ಪದ್ಮವಿಭೂಷಣ, ಕರ್ನಾಟಕ ಮೂಲದ ಸಂಗೀತ ನಿರ್ದೇಶಕ ರಿಕಿ ಕೇಜ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಇಂದು ನಡೆದ ಪದ್ಮ ಪ್ರಶಸ್ತಿಗಳ ಪ್ರದಾನ ಕಾರ್ಯಕ್ರಮದಲ್ಲಿ 71 ವ್ಯಕ್ತಿಗಳನ್ನು ಸನ್ಮಾನಿಸಲಾಯಿತು. ರಾಷ್ಟ್ರಪತಿ ಭವನದಲ್ಲಿ ವಿವಿಧ ಕ್ಷೇತ್ರಗಳಲ್ಲಿನ ಗಮನಾರ್ಹ ಕೊಡುಗೆ ಮತ್ತು ಕೆಲಸಕ್ಕಾಗಿ 71 ಗಣ್ಯ ವ್ಯಕ್ತಿಗಳಿಗೆ ರಾಷ್ಟ್ರಪತಿಗಳು ಪದ್ಮ ಪ್ರಶಸ್ತಿಗಳನ್ನು ನೀಡಿ ಗೌರವಿಸಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧಂಕರ್, ಕೇಂದ್ರ ಸಚಿವರಾದ ಅಮಿತ್ ಶಾ, ಎಸ್ ಜೈಶಂಕರ್, ಪ್ರಹ್ಲಾದ್ ಜೋಶಿ, ಜಿತೇಂದ್ರ ಸಿಂಗ್, ಜಿ ಕಿಶನ್ ರೆಡ್ಡಿ ಮತ್ತು ಇತರ ಹಲವಾರು ಸಚಿವರು ಮತ್ತು ಗಣ್ಯರು ಉಪಸ್ಥಿತರಿದ್ದರು.
ಈ ಸಮಾರಂಭದಲ್ಲಿ, ರಾಷ್ಟ್ರಪತಿ ಮುರ್ಮು ಅವರು ಭಾರತದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ (ನಿವೃತ್ತ) ಜಗದೀಶ್ ಸಿಂಗ್ ಖೇಹರ್ ಅವರಿಗೆ ಸಾರ್ವಜನಿಕ ವ್ಯವಹಾರಗಳ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಪ್ರದಾನ ಮಾಡಿದರು. ಜಾನಪದ, ಭಕ್ತಿ ಮತ್ತು ಛಠ್ ಗೀತೆಗಳಿಗೆ ಹೆಸರುವಾಸಿಯಾದ ಪ್ರಸಿದ್ಧ ಜಾನಪದ ಗಾಯಕಿ ಶಾರದಾ ಸಿನ್ಹಾ ಅವರಿಗೆ ಕಲೆ-ಜಾನಪದ ಸಂಗೀತ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಲಾಗಿದೆ. ಅವರ ಪುತ್ರ ಅಂಶುಮಾನ್ ಸಿನ್ಹಾ ಅವರ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.