ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ದಿಟ್ಟ ಕ್ರಮ: 70,000 ಹುದ್ದೆಗಳ ನೇಮಕಾತಿ ಪರೀಕ್ಷೆಗೆ ರಾಜ್ಯ ಸರ್ಕಾರ ಹೈ-ಅಲರ್ಟ್

Share with

ಬೆಂಗಳೂರು, ಜುಲೈ 23: ಇತ್ತೀಚಿನ ದಿನಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು (government) ಮುನ್ನೆಚ್ಚರಿಕಾ ಕ್ರಮವಾಗಿ ನೇಮಕಾತಿ ಪರೀಕ್ಷೆಗಳ ಸಿದ್ಧತೆ ಕುರಿತು ಉನ್ನತ ಮಟ್ಟದ ಸಭೆ ಮಾಡಿದೆ. ಗೃಹ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 70,000ಕ್ಕೂ ಹೆಚ್ಚು ಹುದ್ದೆಗಳ (recruitment) ಭರ್ತಿಗೆ ಸರ್ಕಾರ ಮುಂದಾಗಿದ್ದು, ಪರೀಕ್ಷೆಗಳನ್ನು ಅತ್ಯಂತ ಪಾರದರ್ಶಕ ಹಾಗೂ ಸುರಕ್ಷಿತವಾಗಿ ನಡೆಸಲು ಮಾಸ್ಟರ್ ಪ್ಲಾನ್ ರೂಪಿಸಿದೆ.

ರಾಜೇಂದ್ರ ಕಟಾರಿಯಾ ನೇತೃತ್ವದಲ್ಲಿ ಸಭೆ
ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ ನೇತೃತ್ವದಲ್ಲಿ ಇಂದು ಪ್ರಮುಖ ಸಭೆ ಜರುಗಿತು. ಸಭೆಯಲ್ಲಿ ಮಾತನಾಡಿದ ಅವರು, ‘ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ, ಅತ್ಯಂತ ನ್ಯಾಯಸಮ್ಮತವಾಗಿ ಮತ್ತು ಪಾರದರ್ಶಕವಾಗಿ ಪರೀಕ್ಷೆಗಳನ್ನು ನಡೆಸಬೇಕು. ಪ್ರತಿಯೊಂದು ಇಲಾಖೆಯೂ ತಮ್ಮ ನಡುವೆ ಉತ್ತಮ ಸಮನ್ವಯತೆ ಕಾಯ್ದುಕೊಳ್ಳುವಂತೆ’ ರಾಜ್ಯದ ಎಲ್ಲ ಜಿಲ್ಲೆಗಳ ಡಿಸಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಭದ್ರತೆ ಮತ್ತು ಸಾರಿಗೆ: ಪರೀಕ್ಷಾ ಕೇಂದ್ರಗಳಿಗೆ ಭಾರೀ ಪೊಲೀಸ್ ಬಂದೋಬಸ್ತ್, ಪ್ರಶ್ನೆಪತ್ರಿಕೆಗಳ ಸುರಕ್ಷಿತ ಸಾಗಣೆ, ವಾಹನ ಸಂಚಾರ ನಿರ್ವಹಣೆ ಹಾಗೂ ತುರ್ತು ವ್ಯವಸ್ಥೆಗಳನ್ನು ಸಮರ್ಪಕವಾಗಿ ಮಾಡಿಕೊಳ್ಳಬೇಕು.

ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣು: ಪ್ರಶ್ನೆಪತ್ರಿಕೆ ಲೀಕ್ ಮಾಡುವ ವದಂತಿ ಹಾಗೂ ಅಕ್ರಮ ತಡೆಯಲು ಸೈಬರ್ ಕ್ರೈಂ ಮತ್ತು ಗುಪ್ತಚರ ಇಲಾಖೆಗಳು ಡಿಜಿಟಲ್ ಮಾಧ್ಯಮ ಹಾಗೂ ಸೋಶಿಯಲ್ ಮೀಡಿಯಾ ಮೇಲೆ ತೀವ್ರ ನಿಗಾ ವಹಿಸಬೇಕು. ಈ ಸಂಬಂಧ ಸೈಬರ್ ಕ್ರೈಂ ಮತ್ತು ಗುಪ್ತಚರ ಇಲಾಖೆಗೂ ಸೂಚಿಸಲಾಗಿದೆ.
ತಪ್ಪಿತಸ್ಥರ ವಿರುದ್ಧ ಕಠಿಣ ಶಿಕ್ಷೆ
ಪ್ರಶ್ನೆಪತ್ರಿಕೆ ಸೋರಿಕೆ, ಬೇರೆಯವರ ಬದಲಿಗೆ ಪರೀಕ್ಷೆ ಬರೆಯುವುದು, ನಕಲು ಮಾಡುವುದು ಸೇರಿದಂತೆ ಯಾವುದೇ ರೀತಿಯ ಅಕ್ರಮ ಎಸಗಿದರೆ ಸರ್ಕಾರ ಸಹಿಸುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಲಾಗಿದೆ. ತಪ್ಪಿತಸ್ಥರ ವಿರುದ್ಧ ‘ಕರ್ನಾಟಕ ಸಾರ್ವಜನಿಕ ಪರೀಕ್ಷೆಗಳ ಕಾಯ್ದೆ, 2023’ ರ ಅಡಿಯಲ್ಲಿ ಜೈಲು ಶಿಕ್ಷೆ ಸೇರಿದಂತೆ ಅತ್ಯಂತ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ ಹೇಳಿದ್ದಾರೆ.


Share with

Leave a Reply

Your email address will not be published. Required fields are marked *