ಉಡುಪಿ: ಬೇಸಿಗೆಯಲ್ಲಿ ನೀರಿನ ಅಭಾವವಾಗದಂತೆ ಕ್ರಮವಹಿಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು 

Share with

ಉಡುಪಿ: ಜಿಲ್ಲೆಯಲ್ಲಿ ಮುಂಬರುವ ಬೇಸಿಗೆ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯಾತ್ಮಕವಾಗುವಂತಹ ಗ್ರಾಮಗಳನ್ನು ಗುರುತಿಸಿ, ನೀರಿನ ಸಮಸ್ಯೆ ಉಂಟಾದಲ್ಲಿ ಸ್ಥಳೀಯ ನೀರಿನ ಮೂಲಗಳಿಂದ ಕುಡಿಯುವ ನೀರು ಒದಗಿಸಲು ಯೋಜನೆಗಳನ್ನು ಈಗಲೇ ರೂಪಿಸಿಕೊಂಡು ಯಾವುದೇ ನೀರಿನ ತೊಂದರೆಯಾಗದಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಂ.ಟಿ ರೇಜು ಹೇಳಿದರು.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲೆಯ ಮಾಸಿಕ ಪ್ರಗತಿ ಪರಿಶೀಲನಾ ಸಭೆ

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಫೆ.27ರಂದು ನಡೆದ ಉಡುಪಿ ಜಿಲ್ಲೆಯ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಜೆ.ಜೆ.ಎಂ ಯೋಜನೆಯಡಿ ಉಳಿದ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡು ಶೀಘ್ರವಾಗಿ ಪೂರ್ಣಗೊಳೀಸುವುದರ ಜೊತೆಗೆ ಕುಡಿಯುವ ನೀರಿನ ಅಭಾವವಾಗದಂತೆ ನೋಡಿಕೊಳ್ಳಬೇಕು. ಉಡುಪಿ ನಗರಕ್ಕೆ ವರಾಹಿ ಯೋಜನೆಯ ಕುಡಿಯುವ ನೀರಿನ ಕಾಮಗಾರಿಯನ್ನು ಅರಣ್ಯ ಇಲಾಖೆಯ ಪೂರ್ವಾನುಮತಿ ಪಡೆದು ಹಾಗೂ ಕೆಲವೊಂದು ಭಾಗದಲ್ಲಿ ತಾತ್ಕಾಲಿಕ ಕಾಮಗಾರಿಯನ್ನು ಕೈಗೊಂಡು ನಗರಕ್ಕೆ ನೀರು ಒದಗಿಸಬೇಕು ಎಂದರು.

ಜಿಲ್ಲೆಯಲ್ಲಿ ಮುಂದಿನ 19 ವಾರಗಳಿಗಾಗುವಷ್ಟು ಜಾನುವಾರುಗಳ ಮೇವು ಲಭ್ಯವಿದೆ. ರೈತರಿಗೆ ಹೆಚ್ಚಿನ ಮೇವಿನ ಕಿಟ್‌ಗಳನ್ನು ವಿತರಿಸುವುದರೊಂದಿಗೆ ಮೇವು ಬೆಳೆಯಲು ಪ್ರೋತ್ಸಾಹಿಸಬೇಕು ಎಂದ ಅವರು, ಸಾಧ್ಯವಾದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿಯೂ ಮೇವು ಬೆಳೆಯಲು ಮುಂದಾಗಬೇಕು ಎಂದು ಹೇಳಿದರು.

ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಂದ ಜಿಲ್ಲೆಯಲ್ಲಿ ಅಡಿಕೆ ಹಳದಿ ರೋಗ ನಿಯಂತ್ರಣ, ಪ್ರಧಾನ ಮಂತ್ರಿ ಸಿಂಚಾಯಿ ಯೋಜನೆಯ ಅನುಷ್ಠಾನ ಮತ್ತಿತರ ಯೋಜನೆಗಳ ಮಾಹಿತಿ ಪಡೆದು ಮಾತನಾಡಿ, ತೋಟಗಾರಿಕೆ ಬೆಳೆಗಳ ಮೌಲ್ಯವರ್ಧನೆಗೆ ಹೆಚ್ಚು ಒತ್ತು ನೀಡಬೇಕು. ಫುಡ್ ಪ್ರೊಸೆಸ್ಸಿಂಗ್ ಯೂನಿಟ್‌ಗಳನ್ನು ತೆರೆಯಲು ಹಾಗೂ ಮಹಿಳಾ ಸ್ವಯಂ ಸಂಘಗಳ ಮೂಲಕ ಸಿದ್ಧ ಆಹಾರ ಪದಾರ್ಥಗಳ ಉತ್ಪಾದನೆಗೆ ತೊಡಗಿಸಿಕೊಳ್ಳಲು ಉತ್ತೇಜಿಸಬೇಕು ಎಂದರು.

ಸರಕಾರ ವಿವೇಕ ಯೋಜನೆಯಡಿ ಹೊಸದಾಗಿ 200 ಶಾಲಾ ತರಗತಿಗಳ ನಿರ್ಮಾಣಕ್ಕೆ ಸಾಕಷ್ಟು ಅನುದಾನ ನೀಡಿದ್ದು, ಅವುಗಳಲ್ಲಿ 160 ಪೂರ್ಣಗೊಂಡಿದ್ದು, ಬಾಕಿ ಉಳಿದ 40 ಕಾಮಗಾರಿಗಳು ನಿರ್ಮಾಣ ಹಂತದಲ್ಲಿವೆ. ಇವುಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದ ಅವರು, ಈ ಬಾರಿಯ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಜಿಲ್ಲೆಯು ಪ್ರಥಮ ಸ್ಥಾನ ಪಡೆಯುವಂತೆ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.

ಮೀನುಗಾರಿಕೆ ಚಟುವಟಿಕೆ ಸಂದರ್ಭದಲ್ಲಿ ಅಪಘಾತಕ್ಕೀಡಾಗಿ ಮರಣ ಹೊಂದಿದ ಸಂದರ್ಭದಲ್ಲಿ ಪರಿಹಾರ ಪಡೆಯಲು ಅನುಕೂಲವಾಗುವಂತೆ ಮೀನುಗಾರರ ಸೊಸೈಟಿಯಲ್ಲಿ ಸದಸ್ಯತ್ವ ಹೊಂದಿದ ಮೀನುಗಾರರಿಗೆ ವಿಮೆಯ ಪ್ರೀಮಿಯಂ ಮೊತ್ತವನ್ನು ಸರಕಾರ ತುಂಬುತ್ತಿದೆ. ಒಂದೊಮ್ಮೆ ಅಪಘಾತ ಆಗಿ ಮರಣ ಹೊಂದಿದ ಮೀನುಗಾರರಿಗೆ 5 ಲಕ್ಷ ರೂ. ವರೆಗೆ ಪರಿಹಾರವನ್ನು ಒದಗಿಸಲಾಗುವುದು, ಕಳೆದ ಹಲವು ದಿನಗಳ ಹಿಂದೆ ಗಂಗೊಳ್ಳಿಯ ಬಂದರುಗಳಲ್ಲಿ ಬೆಂಕಿ ಅಪಘಾತದಿಂದ ಸುಟ್ಟು ಹೋದ ಬೋಟ್ ಮಾಲೀಕರಿಗೆ ಶೀಘ್ರದಲ್ಲಿಯೇ ಪರಿಹಾರ ಹಣವನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳ ಪಡಿತರ ಚೀಟಿಯಲ್ಲಿ ಸಣ್ಣ ಪುಟ್ಟ ತಪ್ಪುಗಳಿಂದಾಗಿ ಸರಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ವಂಚಿತರಾಗುತ್ತಿದ್ದಾರೆ. ಸರಕಾರ ತಿದ್ದುಪಡಿಗೆ ಕಾಲಾವಕಾಶ ನೀಡಿದ ಸಂದರ್ಭದಲ್ಲಿ ಅವುಗಳನ್ನು ಸರಿಪಡಿಸುವ ಕಾರ್ಯಗಳನ್ನು ಆಹಾರ ಇಲಾಖೆಯವರು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *