ಬೆಂಗಳೂರು, ಅಕ್ಟೋಬರ್ 15: ರಾಜ್ಯ ಸರ್ಕಾರದಿಂದ ನಡೆಸಲಾಗುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಉರಫ್ ಜಾತಿ ಸಮೀಕ್ಷೆ (Caste Survey) ಬಹುತೇಕ ಮುಕ್ತಾಯ ಹಂತಕ್ಕೆ ತಲುಪಿದಂತಾಗಿದೆ. ಜನಸಾಮಾನ್ಯರು ಸೇರಿದಂತೆ ರಾಜಕೀಯ ನಾಯಕರು ಸಮೀಕ್ಷೆಯಲ್ಲಿ ಭಾಗವಹಿಸಿದ್ದಾರೆ. ಸಮೀಕ್ಷೆಯಲ್ಲಿ ಭಾಗವಹಿಸುವುದು ಸಂಪೂರ್ಣವಾಗಿ ಸ್ವಯಂಪ್ರೇರಿತವೆಂದು ಆಯೋಗ ಈಗಾಗಲೇ ಸ್ಪಷ್ಟನೆ ನೀಡಿದೆ. ಹೀಗಾಗಿ ಇನ್ಫೋಸಿಸ್ ಮುಖ್ಯಸ್ಥರಾದ ನಾರಾಯಣ ಮೂರ್ತಿ ಹಾಗೂ ಸುಧಾ ನಾರಾಯಣ ಮೂರ್ತಿ (Sudha Murty) ಅವರು ಸಮೀಕ್ಷೆಯಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ.
ಈ ಕುರಿತಾಗಿ ನಾರಾಯಣ ಮೂರ್ತಿ ಹಾಗೂ ಸುಧಾ ನಾರಾಯಣ ಮೂರ್ತಿ ಅವರು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ‘ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನಮ್ಮ ಕೆಲವು ವೈಯಕ್ತಿಕ ಕಾರಣಗಳಿಂದ ಮಾಹಿತಿ ನೀಡಲು ನಿರಾಕರಿಸುತ್ತಿದ್ದೇವೆ. ನಾವು ಹಿಂದುಳಿದ ಯಾವು ಜಾತಿಗೂ ಸೇರುವರಲ್ಲ. ಆದ್ದರಿಂದ ಈ ಸಮೀಕ್ಷೆ ಸರ್ಕಾರಕ್ಕೆ ಏನೂ ಉಪಯೋಗವಿಲ್ಲ. ಹಾಗಾಗಿ ನಮ್ಮ ಕುಟುಂಬ ಈ ಸಮೀಕ್ಷೆಯಲ್ಲಿ ಭಾಗವಹಿಸುದಿಲ್ಲ ಮತ್ತು ಮಾಹಿತಿಯನ್ನು ನೀಡಲು ನಿರಾಕರಿಸಿದ್ದೇವೆ’ ಎಂದು ಸ್ವಯಂ ದೃಢೀಕರಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.





