ಉಡುಪಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯ ಘಟಕದ ಅಧ್ಯಕ್ಷರು ನನ್ನ ಮೇಲೆ ವಿಶ್ವಾಸವಿಟ್ಟು ಲೋಕಸಭೆ ಚುನಾವಣೆಗೆ ಟಿಕೆಟ್ ನೀಡಿದ್ದಾರೆ. ಉಡುಪಿ ಹಾಗೂ ಚಿಕ್ಕಮಗಳೂರು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವ ಸಂಕಲ್ಪ ಮಾಡಿದ್ದೇನೆ. ಹಿಂದುತ್ವ, ರಾಷ್ಟ್ರೀಯತೆ ಹಾಗೂ ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮತದಾರರ ಮುಂದಿಟ್ಟು ಮತಯಾಚನೆ ಮಾಡುತ್ತೇನೆ ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಉಡುಪಿ ಬಿಜೆಪಿ ಕಚೇರಿಯಲ್ಲಿ ಮಾ.14ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೋದಿ ಅವರ 10 ವರ್ಷಗಳ ಆಡಳಿತ ವಿಶ್ವದ ಮೆಚ್ಚುಗೆ ಪಡೆದಿದ್ದು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಮತದಾರರ ವಿಶ್ವಾಸ ಪಡೆಯುವಲ್ಲಿ ಸಂಶಯವಿಲ್ಲ. ಈ ಬಾರಿಯ ಚುನಾವಣೆಯಲ್ಲಿ ಶಾಸಕರು, ಮಾಜಿ ಶಾಸಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಒಗ್ಗೂಡಿ ಶ್ರಮಿಸುವ ಮೂಲಕ ದಾಖಲೆ ಅಂತರದಲ್ಲಿ ಬಿಜೆಪಿ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ ಎಂದರು.
ಈಗಾಗಲೇ ಪ್ರಮೋದ್ ಮಧ್ವರಾಜ್, ಸಿ.ಟಿ.ರವಿ, ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಮುಖಂಡರು ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.




